ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರದಿಂದ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ, ಮಾಲ್ ತೆರೆಯಲು ಅವಕಾಶವಿದೆ
ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.
ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ಮಾಡಬಹುದು.
ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ವಿಶೇಷ ಪೂಜೆಗಳಿಗೆ ಅವಕಾಶವಿರುವುದಿಲ್ಲ. ಮದುವೆ, ಕೌಟುಂಬಿಕ ಶುಭ ಕಾರ್ಯಕ್ರಮಗಳಲ್ಲಿ 100 ಜನರಿಗೆ ಅವಕಾಶ ನೀಡಲಾಗಿದೆ.
ಈಜುಕೊಳಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಪಟುಗಳ ಅಭ್ಯಾಸಕ್ಕೆ ಅವಕಾಶ
ಅಂತ್ಯಸಂಸ್ಕಾರ 20 ಜನರಿಗೆ ಅವಕಾಶ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂ ತೆರವು -ನೈಟ್ ಕರ್ಫ್ಯೂ ಜಾರಿ
ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಿನಿಮಾ/ಪಬ್ ಗೆ ಅವಕಾಶ ನೀಡಲಾಗಿಲ್ಲ. ಯಾವುದೇ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭ, ಪ್ರತಿಭಟನೆ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಶೈಕ್ಷಣಿಕ ಸಂಸ್ಥೆಗಳು ತೆರೆಯುವ ಪ್ರತ್ಯೇಕ ತೀರ್ಮಾನ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಅನ್ ಲಾಕ್ ಜಾರಿಯಿದ್ದರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಸರ್ಕಾರದ ನಿಯಮ ಪಾಲಿಸಬೇಕಿದೆ.
15 ದಿನಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದರೆ ನಿರ್ಬಂಧ ಸಡಿಲಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.


















