ಬೆಂಗಳೂರು: ಮನೆಯಲ್ಲಿ ಯಾರೂ ಇರದ ಸಂದರ್ಭ ಒಳ ನುಗ್ಗಿ ಮಹಿಳೆಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಜ್ಞಾನಜ್ಯೋತಿ ನಗರದಲ್ಲಿ ನಿನ್ನೆ ನಡೆದಿದೆ.
ಸ್ಥಳೀಯ ಮನೆಯೊಂದರಲ್ಲಿ ವಾಸವಿದ್ದ 26 ವರ್ಷದ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಮಹಿಳೆಯ ಪತಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು ಶನಿವಾರ ಕೆಲಸಕ್ಕೆ ತೆರಳಿದ್ದರು. ಸಂಜೆ ಗಂಡನ ಸಹೋದರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾವುದೇ ಕಳವು ನಡೆದಿಲ್ಲ. ಆದ್ದರಿಂದ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಶಂಕಿತನೊಬ್ಬನ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















