ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಒಂಟಿ ಮಹಿಳೆ ಯನ್ನು ಬೆದರಿಸಿ ಸುಲಿಗೆಗೈದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಡಗಮಿಜಾರು ಗ್ರಾಮದ ದಿನೇಶ್ ಪೂಜಾರಿ (36), ಬೆಳ್ತಂಗಡಿ ತಾಲೂಕಿನ ಉಳಗುಡ್ಡ ಹೊಸಮನೆಯ ಸುಕೇಶ್ ಪೂಜಾರಿ (32), ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡು ಗ್ರಾಮದ ಹರೀಶ್ ಪೂಜಾರಿ (34) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 1 ತಲವಾರು, 2 ಸ್ಕೂಟರ್, 3 ಮೊಬೈಲ್ ಫೋನ್, 2 ಮಂಕಿಕ್ಯಾಪ್ ಹಾಗೂ ಸುಲಿಗೆಗೈದ 62 ಗ್ರಾಂ ಚಿನ್ನಾಭರಣವನ್ನೂ ವಶಪಡಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸೊತ್ತಿನ ಮೌಲ್ಯ 4.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಗಳು ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಗ್ರಾಮದ ಅಶ್ವಥಪುರ ಬೆರಿಂಜಗುಡ್ಡದ ಕಮಲಾ ಎಂಬಾಕೆಯ ಮನೆಗೆ ಅಕ್ರಮವಾಗಿ ನುಗ್ಗಿ ಕುತ್ತಿಗೆ ಹಿಸುಕಿ ತಲವಾರು ತೋರಿಸಿ ಜೀವ ಬೆದರಿಕೆ ಹಾಕಿ ಚಿನ್ನದ ಕರಿಮಣಿ ಸರ, ಚಿನ್ನದ ಬಳೆಯನ್ನು ಸುಲಿಗೆಗೈದಿದ್ದರು. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

















