ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯವನ್ನು ಪರಿಗಣಿಸಿ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ ಆದೇಶ ನೀಡಬೇಕು. ಈ ಕಾರಣಕ್ಕಾಗಿಯೇ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ ಸರಕಾರದ ಗಮನ ಸೆಳೆಯುತ್ತೇವೆ. ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ಸೆ.11ರಂದು ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನವರು ಪಾಲ್ಗೊಳ್ಳಲಿದ್ದಾರೆ. 12 ರಂದು ವಿಟ್ಲ ಮತ್ತು ಪುತ್ತೂರು ತಾಲೂಕಿನವರು ಹಾಗೂ 13 ರಂದು ಸುಳ್ಯ ಮತ್ತು ಕಡಬ ತಾಲೂಕಿನ ಒಕ್ಕಲಿಗ ಸಂಘದ ಪ್ರತಿನಿಧಿಗಳು, ಇತರೆ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಸೌಜನ್ಯ ಪರವಾದ ಹೋರಾಟ ನಡೆಸಿರುವ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಕೀಲರ ಜತೆಗೆ ಮಾತುಕತೆ ನಡೆಸಿದ್ದೇವೆ. ಇದರ ಜೊತೆಗೆ ಒಕ್ಕಲಿಗರ ಸಮುದಾಯದಿಂದ ಧ್ವನಿಯೆತ್ತಲು ಬಾಲಗಂಗಾಧರ ನಾಥ ಸ್ವಾಮೀಜಿ ಅವರನ್ನು ಭೇಟಿ ಆಗಲಿದ್ದೇವೆ ಎಂದು ತಿಳಿಸಿದರು.

















