ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ಗೆ ಸೋಮವಾರ ಜಾಮೀನು ಮಂಜೂರು ಆಗಿದೆ.
ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ಬೆಂಗಳೂರಿನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂಬ ಆದೇಶದ ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.
ನ್ಯಾಯಾಲಯ ವಿಧಿಸಿದ್ದ 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶೂರಿಟಿ ಇಡುವುದಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬರಲು ಇಂದು ಸಾಧ್ಯವಾಗಲಿಲ್ಲ. ಇನ್ನು ನಾಳೆ (ಮಂಗಳವಾರ) ನ್ಯಾಯಾಲಯದ ಅವಧಿಯಲ್ಲಿ ಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಪೂರೈಸಿದ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಮತ್ತು ಶ್ರೀಕಾಂತ್ ಬಿಡುಗಡೆಯಾಗುವ ಸಾಧ್ಯತೆಯಿದೆ.







