ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಪನ್ನಗ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ .1 ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು.

ನಂತರ ಚಾಲಕರೆಲ್ಲ ಪುತ್ತೂರಿಗೆ ತೆರಳಿ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸಮಸ್ಯೆಗೆ ಸ್ಪಂದಿಸಿದ ಶಾಸಕರು ಎಲ್ಲಾ ಚಾಲಕರಿಗೂ ಕೂಡ ಮುಂಬರುವ 11 ತಿಂಗಳು ಯಾವುದೇ ಸಮಸ್ಯೆ ಇಲ್ಲದೆ ಕರ್ತವ್ಯ ನಿರ್ವಹಿಸಲು ಅನುಮತಿ ಪಡೆದು ಕೊಡುವುದಾಗಿ ಭರವಸೆಯನ್ನು ನೀಡಿದ್ದಾರೆ.
ಅಲ್ಲದೆ ಮುಂದಿನ ಅವಧಿಗೆ ಯಾವುದೇ ರೀತಿಯ ಹಣವನ್ನು ಪಾವತಿಸದೆ ಕೆಲಸ ನಿರ್ವಹಿಸುವ ವ್ಯವಸ್ಥೆಯನ್ನು ಕೂಡ ಮಾಡಿಕೊಡಲಾಗುವುದು ಎಂಬ ಭರವಸೆಯನ್ನು ಶಾಸಕರು ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಇಳಿದಿದ್ದ ಗುತ್ತಿಗೆ ಆಧಾರಿತ ಬಸ್ಸು ಚಾಲಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದುಕೊಂಡು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.






