ಸಮಗ್ರ ನ್ಯೂಸ್: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಮುಗಿದಿದ್ದು, ಇದೀಗ ಅತೃಪ್ತ ಬಿಜೆಪಿ ನಾಯಕರು ಸೆ.17ರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯ ಅತೃಪ್ತ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ, ರಮೇಶ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ 12 ಬಿಜೆಪಿ ನಾಯಕರು ಗೌಪ್ಯ ಸಭೆ ನಡೆಸಿದರು.
ಪಾದಯಾತ್ರೆಯಲ್ಲಿ ವಾಲ್ಮೀಕಿ ಕಾಂಗ್ರೆಸ್ ಅಭಿವೃದ್ಧಿ ನಿಗಮದ ಹಗರಣಗಳು ಹಾಗೂ ಎಸ್ ಸಿ, ಎಸ್ ಟಿ ಅನುದಾನ ದುರ್ಬಳಕೆ ವಿರುದ್ಧ ಹೋರಾಟದ ಕುರಿತು ಚರ್ಚಿಸಲಾಯಿತು. ಮುಡಾ ಹಗರಣದಲ್ಲಿ ಬಿಜೆಪಿ ನಾಯಕರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇವರೆಲ್ಲರೂ ಸೇರಿಕೊಂಡು ಡಿ.ಕೆ.ಶಿವಕುಮಾರ ಅವರನ್ನು ಸಿಎಂ ಮಾಡಲು ಹೊರಟಿದ್ದಾರೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್ ರವಾನಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರತ್ಯೇಕ ಪಾದಯಾತ್ರೆ ಕುರಿತು ಕೇಂದ್ರ ನಾಯಕರ ಜತೆ ಚರ್ಚಿಸಲು ಸಭೆ ನಿರ್ಧರಿಸಿದೆ ಎನ್ನಲಾಗಿದೆ.




























