ಸಮಗ್ರ ನ್ಯೂಸ್::ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಫೆ.2ರಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ.
ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು. ಎಸ್ ಪಿ ಡಾ. ಕೆ ಅರುಣ್, ಹೆಚ್ಚುವರಿ ಎಸ್ಪಿ ಎಸ್ ಟಿ ಸಿದ್ದಲಿಂಗಪ್ಪ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಿತು.
ನಕ್ಸಲ್ ಚಳವಳಿಯಲ್ಲಿ ಉಡುಪಿ ಜಿಲ್ಲೆಯ ವಿಕ್ರಂ ಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದರು. ಇದೀಗ ಲಕ್ಷ್ಮಿ ಪೊಲೀಸರಿಗೆ ಶರಣಾಗಿದ್ದಾರೆ. ಲಕ್ಷ್ಮಿ ಕಳೆದ ಹಲವು ವರ್ಷಗಳಿಂದ ಆಂಧ್ರ ಪ್ರದೇಶದಲ್ಲಿ ತನ್ನ ಪತಿ, ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು.
ನಕ್ಸಲ್ ಶರಣಾಗತಿ ಬಗ್ಗೆ ಟಿವಿಗಳಲ್ಲಿ ಸುದ್ದಿ ನೋಡಿ ತಿಳಿದುಕೊಂಡೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ಅವಕಾಶ ಕೊಟ್ಟಿದ್ದಾರೆ. ಅದರಂತೆ ಶರಣಾಗಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ನನಗೆ ಸಿದ್ದರಾಮಯ್ಯನವರು ಹೆಲ್ಪ್ ಮಾಡಬೇಕು ಎಂದು ಶರಣಾಗತರಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ ಪ್ರಕ್ರಿಯೆ ಬಳಿಕ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಎಸ್ಪಿ ಡಾ.ಅರುಣ್ ಕೆ ಸಮ್ಮಖ ಅವರು ಮಾತನಾಡಿದರು. ನಕ್ಸಲ್ ಶರಣಾಗತಿ ಪ್ಯಾಕೇಜ್ ಬಗ್ಗೆ ಮಾತನಾಡಿದ ಲಕ್ಷ್ಮೀ, ನಮ್ಮೂರಿನಲ್ಲಿ ರಸ್ತೆ, ನೀರು, ಶಾಲೆ, ಆಸ್ಪತ್ರೆ ಇಲ್ಲ. ಅದನ್ನು ಮಾಡಿಕೊಡಬೇಕು ಎಂದು ಹೇಳಿದರು.







