ಸಮಗ್ರ ನ್ಯೂಸ್: ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಅಭಿವೃದ್ಧಿಯ ಮತ್ತು ಹಣಕಾಸು ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಜಿಎಸ್ಟಿ ಬೆಳವಣಿಗೆ ದರ ಉತ್ತಮವಾಗಿದೆ ಎಂದರು.
2024-25ನೇ ಸಾಲಿನ ಬಜೆಟ್ನಲ್ಲಿ ಆದೇಶ ಹೊರಡಿಸಬೇಕಾಗಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಘೋಷಣೆ ಮಾಡಿದ್ದ ಕಾರ್ಯಕ್ರಮಗಳೂ ಸಹ ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ. ಇನ್ನುಳಿದ ಘೋಷಣೆಗಳೂ ಆದೇಶ ಹೊರಡಿಸುವ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ತೀವ್ರರೂಪದ ಅತಿವೃಷ್ಟಿ ಅನಾವೃಷ್ಟಿಗಳಿಲ್ಲದ ಕಾರಣ ರೈತರ ಕೈಗೆ ಉತ್ತಮ ಫಸಲು ಸಿಕ್ಕಿದೆ. ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಂದ ಸುಮಾರು 149 ಲಕ್ಷ ಟನ್ನುಗಳಷ್ಟು ಕೃಷಿ ಉತ್ಪಾದನೆ ನಿರೀಕ್ಷಿಸಲಾಗಿದೆ. ಸರ್ಕಾರವು ತೆಗೆದುಕೊಂಡ ಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ರೈತ ಕುಟುಂಬಗಳಲ್ಲಿ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ. ನನ್ನ ಸರ್ಕಾರವು ರಚನೆಯಾದಾಗಿಂದಲೂ ತೊಗರಿ ಮತ್ತು ಕೊಬ್ಬರಿಗೆ ಬೆಲೆಗಳು ಕುಸಿದಾಗ ರೈತರ ನೆರವಿಗೆ ನಿಂತು ಪ್ರೋತ್ಸಾಹ ಧನವನ್ನು ನೀಡಿದೆ. ಕೃಷಿಭಾಗ್ಯ ಯೋಜನೆಯನ್ನು ಮುಂದುವರೆಸುವ ಮೂಲಕ ಅಗತ್ಯ ಇರುವ ಕಡೆಗಳಲ್ಲೆಲ್ಲಾ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪೊಲೀಸ್ ಠಾಣೆ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣ ಹೆಚ್ಚಾಗಿದೆ. ಆದರೆ ರಾಜ್ಯದಲ್ಲಿ ಪೊಲೀಸರು ನಿರಂತರ ಜಾಗೃತಿ ಮೂಡಿಸಿ, ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣ ಇಳಿಕೆ ಕಾಣುತ್ತಿದೆ ಎಂದರು.
ಮೂಲಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಜನರಿಗೆ ಅನುಕೂಲವಾಗಿದೆ. ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ನೀಡಲಾಗಿದೆ. ಬಜೆಟ್ನಲ್ಲಿ ಶೇ.15.01ರಷ್ಟು ಸಂಪತ್ತು ಬಂಡವಾಳ ವೆಚ್ಚಕ್ಕೆ ವಿನಿಯೋಗ ಮಾಡಲಾಗುತ್ತದೆ. ಇದು ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ರಾಜ್ಯ ಸೇರಿದಂತೆ ಹಲವು ಅಭಿವೃದ್ಧಿಶೀಲ ರಾಜ್ಯಗಳಿಗಿಂತ ಹೆಚ್ಚಿನದ್ದಾಗಿದೆ ಎಂದರು.







