ಸಮಗ್ರ ನ್ಯೂಸ್: ಬೆಂಗಳೂರಿನ ಗಾಯತ್ರಿ ಲೇಔಟ್ ನಲ್ಲಿ ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಟಿ ಕೋಟಿ ರೂಪಾಯಿ ಹಣವನ್ನು ಸಂಪಾದಿಸಿ ಕೋಟ್ಯಾಧಿಪತಿ ಆಗಿದ್ದ ಹಾಗೂ ಕನ್ನಡಪರ ಸಂಘಟನೆಗಳ ಮೂಲಕ ನಾಡಿನ ಸೇವೆಗೆ ಹೋರಾಡುತ್ತಿದ್ದ ಮಂಗಳಮುಖಿ ತನುಶ್ರೀ, ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ.
ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿದ್ದು, ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್ನ ಮನೆಯಲ್ಲಿ ಮಾರಕಾಸ್ತ್ರದಿಂದ ಇರಿದು ಬರ್ಬರ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ ಕೃತ್ಯದ ಬಳಿಕ ಪತಿ ಜಗನ್ನಾಥ್ ಹಾಗೂ ತನುಶ್ರೀ ಅವರ ಮನೆಗೆಲಸದಾಕೆ ಇಬ್ಬರೂ ಪರಾರಿ ಆಗಿದ್ದಾರೆ.
ಸಂಗಮ ಎನ್ ಜಿಓ ನಡೆಸುತ್ತಿದ್ದ ತನುಶ್ರೀ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆಸ್ತಿವಂತೆ ಎಂಬುದನ್ನು ನೋಡಿದ್ದ ಜಗನ್ನಾಥ್ ಮದುವೆ ಮಾಡಿಕೊಂಡು 3 ತಿಂಗಳು ಜೊತೆಯಲ್ಲಿದ್ದು, ಇದೀಗ ಹಣಕ್ಕಾಗಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್.ಪುರಂ ಠಾಣೆಯ ಪೋಲಿಸರು ಪರಿಶೀಲನೆ ಮಾಡಿದ್ದಾರೆ. ಇನ್ನು ನೂರಾರು ಮಂಗಳಮುಖಿಯರು ಘಟನಾ ಸ್ಥಳಕ್ಕೆ ಧಾವಿಸಿದ್ದು ದುಃಖಿತರಾಗಿದ್ದಾರೆ.