ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ (ವಿ.ಎಚ್.ಪಿ.) ಹಾಗೂ ಬಜರಂಗದಳ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಯಂಪ್ರೇರಿತ ಬಂದ್ಗೆ ಕರೆ ನೀಡಲಾಗಿದೆ. ಜಿಲ್ಲಾಡಳಿತದ ವಿರೋಧದ ನಡುವೆಯೂ ಈ ಬಂದ್ಗೆ ಕಾಫಿನಾಡಿನ ಗ್ರಾಮೀಣ ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ಮಂಗಳೂರು-ಚಿಕ್ಕಮಗಳೂರು ಗಡಿ ಗ್ರಾಮಗಳು ಸಂಪೂರ್ಣ ಸ್ಥಬ್ಧವಾಗಿವೆ. ಬೆಳಿಗ್ಗೆ 9 ಗಂಟೆಯಾದರೂ ಅಂಗಡಿ-ಮುಂಗಟ್ಟುಗಳು ತೆರೆಯದೇ ಇದ್ದು, ಜನಜೀವನ ಸಂಪೂರ್ಣ ಸ್ತಬ್ಧವಾಗಿದೆ. ಕೊಟ್ಟಿಗೆಹಾರದಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ, ಮತ್ತು ಸ್ಥಳೀಯರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಜಿಲ್ಲಾಡಳಿತವು ಬಂದ್ಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದರೂ, ಸಂಘಪರಿವಾರದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಒದಗಿಸಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.







