ಸಮಗ್ರ ನ್ಯೂಸ್: ಮಂಗಳೂರು ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ಹಾಗೂ ಮಹಿಳೆ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾರೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ದೇರಳಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ ಎಂಬ ಬಾಲಕಿ ಮೃತಪಟ್ಟಿದೆ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.
ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಮತ್ತೊಬ್ಬ ಪ್ರೇಮ ಕುಮಾರಿ(58ವ) ಎಂಬ ಮಹಿಳೆ ಮೃತಪಟ್ಟಿದ್ದು, ಸಿಲುಕಿರುವ ಮೂವರನ್ನು ಕಾಪಾಡುವ ಕಾರ್ಯ ಮುಂದುವರಿದಿದೆ.