ಸಮಗ್ರ ನ್ಯೂಸ್: ಕರಾವಳಿಯಾದ್ಯಂತದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಎರಡೂ ಜಿಲ್ಲೆಗಳ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಕರಾವಳಿಯಲ್ಲಿ ಆಗಾಗ ಮಳೆ ಸುರಿಯುತ್ತಿದ್ದರೂ, ಇಂದು ಸಂಜೆಯ ಬಳಿಕ ಮಳೆಯ ಅಬ್ಬರ ಹೆಚ್ಚಾಗಿದೆ .ಹವಾಮಾನ ಇಲಾಖೆಯು ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಆದಾಗ್ಯೂ, ಪದವಿ ಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಎರಡೂ ಜಿಲ್ಲೆಗಳ ಜಿಲ್ಲಾಡಳಿತದ ಪ್ರತ್ಯೇಕ ಆದೇಶಗಳಲ್ಲಿ ಸ್ಪಷ್ಟಪಡಿಸಲಾಗಿದೆ.