ಸಮಗ್ರ ನ್ಯೂಸ್: ಯೆಮೆನ್ ದೇಶದಲ್ಲಿ ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಸಂಪೂರ್ಣವಾಗಿ ರದ್ದು ಮಾಡಿದ್ದಾರೆ ಎಂದು ವರದಿಯಾಗಿತ್ತು. ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರ ಕಚೇರಿ ಸೋಮವಾರ (ಜು.28) ಈ ಬಗ್ಗೆ ಮಾಹಿತಿ ನೀಡಿತ್ತು. ಆದರೆ ಇದೀಗ ವಿದೇಶಾಂಗ ಸಚಿವಾಲಯವು ಈ ಸುದ್ದಿಯನ್ನು ತಿರಸ್ಕರಿಸಿದೆ.
“ನಿಮಿಷಾ ಪ್ರಿಯಾ ಪ್ರಕರಣದ ಕುರಿತು ಕೆಲವು ವ್ಯಕ್ತಿಗಳು ಹಂಚಿಕೊಂಡಿರುವ ಮಾಹಿತಿಯು ತಪ್ಪಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
“ಈ ಹಿಂದೆ ಅಮಾನತುಗೊಳಿಸಲಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಯಿತು” ಎಂದು ಗ್ರ್ಯಾಂಡ್ ಮುಫ್ತಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಇದನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಅಧಿಕೃತ ಲಿಖಿತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿತ್ತು.







