ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳೂರು ನೆಹರು ಮೈದಾನಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನಡೆಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ವಿವಿಧ ಪರೇಡ್ ತಂಡಗಳ ಪಥಸಂಚಲನ ವೀಕ್ಷಿಸಿದರು.
ಬಳಿಕ ಮಾತನಾಡಿದ ಅವರು, ಹಲವು ಸವಾಲುಗಳ ಮಧ್ಯೆ ದೇಶದ ಪ್ರಥಮ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಈ ದೇಶದ ವಿಕಾಸಕ್ಕೆ ಮಹತ್ತರ ಮುನ್ನುಡಿ ಬರೆದರು. ಯೋಜನಾ ಆಯೋಗವನ್ನು ಸ್ಥಾಪಿಸುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ದಿಟ್ಟ ಹೆಜ್ಜೆ ಇಟ್ಟರು. ಕಾಲಾನುಕ್ರಮದಲ್ಲಿ ಬಂದ ಸರಕಾರಗಳು ಈ ದೂರದೃಷ್ಟಿಯನ್ನು ಮುಂದುವರೆಸಿಕೊಂಡು ಬಂದುದರಿಂದ ಇಂದು ಭಾರತವು ಜಗತ್ತಿನಲ್ಲಿ ತಲೆ ಎತ್ತಿ ನಿಂತಿದೆ.
ಕರ್ನಾಟಕದ ಸರ್ವಾಂಗೀಣ ಪ್ರಗತಿಯ ಹಾದಿಯಲ್ಲಿ ದಿಟ್ಟ ಹೆಜ್ಜೆಯನ್ನು ರಾಜ್ಯ ಸರಕಾರ ಇಟ್ಟಿದೆ. ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಸ್ವಾತಂತ್ರೋತ್ತರ ಭಾರತದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.
ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ, ಧಾರ್ಮಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗುರುತಿಸಬಹುದಾದ ವೈಶಿಷ್ಟ್ಯತೆಯನ್ನು ಹೊಂದಿರುವ ನಮ್ಮ ದಕ್ಚಿಣ ಕನ್ನಡ. ಜಿಲ್ಲೆ ಸ್ವಾತಂತ್ರ್ಯ ಚಳುವಳಿಯಲ್ಲೂ ಸಹ ಗರಿಷ್ಠ ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯವಾಗಿದೆ.
5 ಗ್ಯಾರಂಟಿ ಯೋಜನೆಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿರುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3.79 ಲಕ್ಷ ಮಹಿಳೆಯರಿಗೆ ಇದುವರೆಗೆ ಒಟ್ಟು ರೂ.1377 ಕೋಟಿ ಸಹಾಯಧನ ಮಂಜೂರಾಗಿರುತ್ತದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 11.76 ಲಕ್ಷ ಮಂದಿ ಫಲಾನುಭವಿಗಳಿಗೆ,
ಗೃಹ ಜ್ಯೋತಿ ಯೋಜನೆಯಡಿ 5.51 ಲಕ್ಷ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದು ಶೇಕಡಾ 98 ರಷ್ಟು ಪ್ರಗತಿ ಸಾಧಿಸಲಾಗಿದ್ದು, 789 ಕೋಟಿ ರೂಪಾಯಿ ಮೊತ್ತವನ್ನು ರಾಜ್ಯ ಸರಕಾರವು ಪಾವತಿಸಿದೆ ಎಂದರು







