ಸಮಗ್ರ ನ್ಯೂಸ್: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.
ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ ಸಿದ್ದರಾಮಯ್ಯಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂಥ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಪ್ರಬಲ ಸಂದೇಶ ರವಾನಿಸಿದೆ.
ರಾಜು ಕಾಗೆ ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ, “ನನ್ನ ಕ್ಷೇತ್ರಕ್ಕೆ 25 ಕೋಟಿ ವಿಶೇಷ ಅನುದಾನ ಬಿಡುಗಡೆ ಆಗಿದ್ದರೂ, ಎರಡು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಸಮಸ್ಯೆ ಬಗೆಹರಿಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆನು” ಎಂದು ಎಚ್ಚರಿಕೆ ನೀಡಿದ್ದರು.
ಆಳಂದ ಶಾಸಕ ಬಿ.ಆರ್ ಪಾಟೀಲ ಎರಡು ತಿಂಗಳ ಹಿಂದೆ ವಸತಿ ಇಲಾಖೆಯ ಭ್ರಷ್ಟಾಚಾರ ಬಗ್ಗೆ ಧ್ವನಿ ಎತ್ತಿದ್ದರು. ಅದಾದ ನಂತರ, ಬಿ.ಆರ್ ಪಾಟೀಲರಂತೆಯೇ ನನ್ನ ಸ್ಥಿತಿಯೂ ಇದೆ ಎಂದು ರಾಜು ಕಾಗೆ ಹೇಳಿದ್ದರು.







