ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಎತ್ತಿನಹೊಳೆ ಏತ ನೀರಾವರಿ ಯೋಜನೆ ಹಾಗೂ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ತಡೆ ಹಿಡಿದಿದೆ.
ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 2,000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗಾಗಿ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ತಡೆಹಿಡಿದು ಆದೇಶ ಹೊರಡಿಸಿದೆ. ಯೋಜನೆಯ ಸದಸ್ಯರು ಗಂಭೀರ ಪರಿಸರ ಕಾಳಜಿಗಳನ್ನು ಮತ್ತು ಅರಣ್ಯ ಕಾನೂನುಗಳ ಉಲ್ಲಂಘನೆಯ ವಿರುದ್ಧ ನಿರಂತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪಂಪ್ಡ್ ಸ್ಟೋರೇಜ್ ಯೋಜನೆಯು ವಿಶ್ವದ ಅತಿದೊಡ್ಡ ಬ್ಯಾಟರಿ ತಂತ್ರಜ್ಞಾನ ಎಂದೇ ಪರಿಗಣಿಸಲಾಗಿದ್ದು, ಎರಡು ಜಲಾಶಯಗಳ ನಡುವೆ ಇದನ್ನು ಕಾರ್ಯಗತಗೊಳಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್ ಲಭ್ಯವಿದ್ದಾಗ, ಕೆಳಗಿನ ಜಲಾಶಯದ ನೀರನ್ನು ಮೇಲಿನ ಜಲಾಶಯಕ್ಕೆ ಪಂಪ್ ಮಾಡಿ ಸಂಗ್ರಹಿಸಲಾಗುತ್ತದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾದಾಗ ಆ ಸಂಗ್ರಹಿಸಿದ ನೀರನ್ನು ಬಳಸಿ ವಿದ್ಯುತ್ ಉತ್ಪಾದಿಸಿ ಗ್ರಿಡ್ಗೆ ಪೂರೈಸಲಾಗುತ್ತದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಈ ತಂತ್ರಜ್ಞಾನವನ್ನು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಲ್ಲಿ (ತಳಕಳಲೆ ಮತ್ತು ಗೇರುಸೊಪ್ಪ ನಡುವೆ) ಅಳವಡಿಸಲು ಹೊರಟಿದ್ದು, ಇದರ ಮೂಲಕ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದೆ. 10,500 ಕೋಟಿ ರೂ. ವೆಚ್ಚದ ಈ ಯೋಜನೆಗೆ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫಾಸ್ಟ್ರಕ್ಚರ್ಸ್ ಸಂಸ್ಥೆಗೆ ಕಳೆದ ಫೆಬ್ರವರಿಯಲ್ಲಿ 8005 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ.
ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿಯು ಈ ಯೋಜನೆಯು 15,000 ಕ್ಕೂ ಹೆಚ್ಚು ಮರಗಳ ಕಡಿತಕ್ಕೆ ಕಾರಣವಾಗುತ್ತದೆ ಎಂದು ಹೇಳಿದೆ. ಈ ಮರಗಳಲ್ಲಿ ಹಲವು ವಿಶ್ವದ 34 ಜಾಗತಿಕ ಜೀವವೈವಿಧ್ಯ ಕೇಂದ್ರಗಳಲ್ಲಿ ಒಂದಾದ ಪಶ್ಚಿಮ ಘಟ್ಟಕ್ಕೆ ಮಾತ್ರವೇ ಸೀಮಿತವಾಗಿದೆ. ಸಮಿತಿಯ ಅಕ್ಟೋಬರ್ 27 ರ 11ನೇ ಸಭೆಯ ನಡವಳಿಯಲ್ಲಿ ಪ್ರಸ್ತಾವಿತ ಯೋಜನಾ ಪ್ರದೇಶವು ಪಶ್ಚಿಮ ಘಟ್ಟದ ಕೇಂದ್ರ ಭಾಗದಲ್ಲಿರುವ ಶರಾವತಿ ಕಣಿವೆ ಸಿಂಗಳಿಕ ಅಭಯಾರಣ್ಯದ ವ್ಯಾಪ್ತಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ. ಈ ಪ್ರದೇಶವು “ಶಾಶ್ವತ ಮಳೆಕಾಡು, ಅರೆ-ನಿತ್ಯಹರಿದ್ವರ್ಣ ಮತ್ತು ಶೋಲಾ ಹುಲ್ಲುಗಾವಲುಗಳ” ಪರಮಾವಧಿಯ ಅರಣ್ಯಗಳನ್ನು ಹೊಂದಿದೆ. ಇವು “ಅತ್ಯಂತ ದುರ್ಬಲ ಮತ್ತು ಸಂಕೀರ್ಣ ಪರಿಸರ ವ್ಯವಸ್ಥೆಗಳು” ಆಗಿದ್ದು, ಒಮ್ಮೆ ನಾಶವಾದರೆ “ಮೂಲ ಸ್ಥಿತಿಗೆ ಮರುಸ್ಥಾಪಿಸಲು ಸಾಧ್ಯವಿಲ್ಲ” ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಯೋಜನಾ ಸ್ಥಳವು ಸಿಂಗಳಿಕ, ಹುಲಿ, ಚಿರತೆ, ಕರಡಿ, ಕಾಡು ನಾಯಿಗಳು, ಕಾಳಿಂಗ ಸರ್ಪ, ಮಲಬಾರ್ ದೊಡ್ಡ ಅಳಿಲು ಮತ್ತು ಇತರ ಅಪರೂಪದ ಹಾಗೂ ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಶರಾವತಿ ಕಣಿವೆ ಅಭಯಾರಣ್ಯದಲ್ಲಿ 730 ಸಿಂಗಳಿಕ ದಾಖಲಾಗಿವೆ. “ಮೇಲಾವರಣ ಮತ್ತು ಆವಾಸಸ್ಥಾನದ ನಷ್ಟವು ಸಿಂಗಳಿಕಗಳ ಉಳಿವಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ” ಎಂದು ಸಮಿತಿ ಎಚ್ಚರಿಸಿದೆ. ಯೋಜನೆಯ ಪ್ರಸ್ತಾಪಕರು ನೀಡಿದ ಪರಿಹಾರ ಅರಣ್ಯೀಕರಣ ಸ್ಥಳವು ಸಿಂಹ ಬಾಲದ ಸಿಂಗಳಿಕಗಳ ಆವಾಸಸ್ಥಾನದ ನಷ್ಟವನ್ನು ಸರಿದೂಗಿಸಲು ಸಾಧ್ಯವಿಲ್ಲ. “ಶಾಶ್ವತ ಮಳೆಕಾಡುಗಳು ಸಂಕೀರ್ಣ ಪರಿಸರ ವ್ಯವಸ್ಥೆಗಳಾಗಿದ್ದು, ಅವುಗಳನ್ನು ಪುನರಾವರ್ತಿಸುವುದು ತುಂಬಾ ಕಷ್ಟ” ಎಂದು ಸಮಿತಿ ದಾಖಲಿಸಿದೆ.
ಸಮಿತಿಯು ಯೋಜನೆಯ ಎಂಜಿನಿಯರಿಂಗ್ ವಿನ್ಯಾಸವನ್ನು ಪರಿಶೀಲಿಸಿದೆ. ಈ ಯೋಜನೆಯು ಎರಡು ಜಲಾಶಯಗಳು, 3.2 ಕಿ.ಮೀ ಉದ್ದದ ಸುರಂಗಗಳು, 500 ಮೀಟರ್ ಆಳದವರೆಗೆ ಉತ್ಖನನ ಮತ್ತು ಭೂಗತ ಕಾಮಗಾರಿಗಳಿಗಾಗಿ ಡ್ರಿಲ್ಲಿಂಗ್ ಮತ್ತು ಸ್ಫೋಟ ಕಾರ್ಯಗಳನ್ನು ಒಳಗೊಂಡಿದೆ. ಈ ಪ್ರದೇಶವು ಭೂಕಂಪನ ವಲಯ 3 ರ ವ್ಯಾಪ್ತಿಗೆ ಬರುತ್ತದೆ. ಇಳಿಜಾರು ಕತ್ತರಿಸುವಿಕೆ, ಸ್ಫೋಟ ಮತ್ತು ಭಾರೀ ಮಳೆಗಾಲದ ಪರಿಣಾಮವಾಗಿ ಭೂಕುಸಿತ ಮತ್ತು ಸವೆತದ ಅಪಾಯಗಳನ್ನು ಹೆಚ್ಚಿಸಬಹುದು. ಇಂತಹ ಕೆಲಸಗಳು ಪ್ರದೇಶದ ಪರಿಸರಕ್ಕೆ ಮಾತ್ರವಲ್ಲದೆ ಮಾನವ ವಾಸಸ್ಥಳಗಳಿಗೂ ವಿನಾಶಕಾರಿಯಾಗಬಹುದು ಎಂದು ಸಮಿತಿ ಎಚ್ಚರಿಸಿದೆ.
ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಅರಣ್ಯಗಳ ಉಪ ಮಹಾನಿರೀಕ್ಷಕರು ಶರಾವತಿ ಕಣಿವೆ ಅಭಯಾರಣ್ಯದ ಸ್ಥಳ ಮತ್ತು ಪರಿಸರ ಸೂಕ್ಷ್ಮತೆಯ ಕಾರಣದಿಂದಾಗಿ ಈ ಪ್ರಸ್ತಾವನೆಯನ್ನು ಶಿಫಾರಸು ಮಾಡಿಲ್ಲ. ಕರ್ನಾಟಕದ ಮುಖ್ಯ ವನ್ಯಜೀವಿ ಪರಿಪಾಲಕರು ಸಹ ಆಕ್ಷೇಪಣೆಗಳನ್ನು ಎತ್ತಿದ್ದು, ಯೋಜನೆಯ ಅನುಷ್ಠಾನವು ಪ್ರದೇಶದ ಸಸ್ಯ ಮತ್ತು ಪ್ರಾಣಿಗಳಿಗೆ “ಭಾರೀ ಹಾನಿ” ಉಂಟುಮಾಡಬಹುದು ಎಂದು ಎಚ್ಚರಿಸಿದ್ದಾರೆ. ಪರಿಸರ ಹಾನಿಯು ಯೋಜನೆಯಿಂದ ಬರುವ ಆರ್ಥಿಕ ಲಾಭಕ್ಕಿಂತ ಹೆಚ್ಚಾಗಿದೆ ಎಂಬ ಅವರ ಅಭಿಪ್ರಾಯವನ್ನು ಸಮಿತಿ ಉಲ್ಲೇಖಿಸಿದೆ. ವಿದ್ಯುತ್ ರವಾನೆಗಾಗಿ ಪ್ರಸ್ತಾಪಿಸಲಾದ ಮಾರ್ಗಗಳು ಅರಣ್ಯ (ಸಂರಕ್ಷಣೆ) ಕಾಯಿದೆ, 1980 ರ ಉಲ್ಲಂಘನೆಯಾಗಿದೆ ಎಂದು ಸಮಿತಿ ಹೇಳಿದೆ.







