ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಕೋಟೆಕಲ್ ಗ್ರಾಮದಲ್ಲಿ ಇಂದು(ನ.29) ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ 5 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಮೃತರ ಪೈಕಿ ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗಿದ್ದು, ಚಾಲಕ ಮಾತ್ರ ಬದುಕುಳಿದಿರುವ ಬಗ್ಗೆ ತಿಳಿದು ಬಂದಿದೆ.
ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆಗೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಕರ್ನಾಟಕದ 5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎರಡು ಕಾರುಗಳ ನಡುವೆ ಢಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.






