ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಸ್ವತಃ ಭಾಗವಹಿಸಲು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕೋರಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಲಾಗಿದೆ.
‘ಈ ಪ್ರಕರಣದ ಆರೋಪಿಗಳು ಈ ಹಿಂದೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಹೆಸರನ್ನು ಉಲ್ಲೇಖಿಸಿದ್ದರು. ಅದನ್ನು ಪರಿಗಣಿಸಿ, ಸಂತ್ರಸ್ತ ಎಂಬ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಈ ಪ್ರಕರಣದಲ್ಲಿ ಸ್ವತಃ ಭಾಗವಹಿಸಲು ಅವಕಾಶ ನೀಡಬೇಕು ಎಂದು ಕೋರಿ ವಕೀಲ ಸಿ.ವಿ ನಾಗೇಶ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗೆ ಪೂರಕವಾಗಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಕುರಿತ ವಿಚಾರಣೆಗೆ ನ್ಯಾಯಾಲಯವು ಇದೇ 3ರಂದು ದಿನ ನಿಗದಿ ಮಾಡಿದೆ’ ಎಂದು ವಕೀಲ ಮಹೇಶ್ ಕಜೆ ಸುದ್ದಿಗಾರರಿಗೆ ತಿಳಿಸಿದರು.







