ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಏ.29ರಂದು ಬುಧವಾರ ಸಂಜೆ 6.40ರ ಗೋದೂಳಿ ಲಗ್ನದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.
ಈಗಾಗಲೇ 105 ಜೋಡಿಗಳು ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲ ವೆಚ್ಚವನ್ನು ಧರ್ಮಾ ಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀಧರ್ಮಸ್ಥಳ ಮಂಜು ನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿ ಯಿಂದ ಭರಿಸಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಎ.ವಿ.ಶೆಟ್ಟಿ ತಿಳಿಸಿದ್ದಾರೆ.
1972ರಲ್ಲಿ ಆರಂಭವಾದ ಉಚಿತ ಸಾಮೂಹಿಕ ವಿವಾಹದಲ್ಲಿ ಕಳೆದ ವರ್ಷದವರೆಗೆ 13ಸಾವಿರ ಜೋಡಿಗಳ ವಿವಾಹ ನಡೆದಿದೆ. ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಡಿ.ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ಬುಧವಾರ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್ಕುಮಾರ್ ಭಾಗವಹಿಸುವರು.






