ತಮಿಳುನಾಡಿನಲ್ಲಿ ಟಿವಿಕೆ – ಕಾಂಗ್ರೆಸ್ ಮೈತ್ರಿ ಸರ್ಕಾರ| ರಾಗಾ ಬೆಂಬಲ ಕೋರಿದ ವಿಜಯ್

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಬಹುತೇಕ ಅಂತಿಮವಾಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿದೆ. ಟಿವಿಕೆ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಸ್ಥಾನಗಳಲ್ಲಿ ಅಂದರೆ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆಯಾದರೂ ಬಹುಮತಕ್ಕೆ ಇನ್ನೂ 10 ಸ್ಥಾನಗಳು ಕಡಿಮೆ ಇದೆ.
ಹೀಗಾಗಿ, ಅನಿವಾರ್ಯವಾಗಿ ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತಿದೆ.

Ad Widget ... ..

ಇದೀಗ ಟಿವಿಕೆ ಪಕ್ಷವು ಕಾಂಗ್ರೆಸ್ ಪಕ್ಷದ ಬೆಂಬಲ ಕೇಳಿದೆ. ಕಾಂಗ್ರೆಸ್ ಪಕ್ಷವು ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ಇದೀಗ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸುವುದಕ್ಕೆ ಮುಂದಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎನ್ನುವ ಕಾರಣಕ್ಕೆ ಹಾಗೂ ಜಾತ್ಯಾತೀತ ಪರ ಒಲವು ಇರುವ ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಲು ಮುಂದ್ದಾಗಿರುವುದಾಗಿ ಹೇಳಿದೆ.

Ad Widget

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಮಿಳುನಾಡಿನ ವಿಜಯ್ ಅವರ ಟಿವಿಕೆ ಪಕ್ಷವು ಕಾಂಗ್ರೆಸ್ ಪಕ್ಷದ ಬೆಂಬಲ ಕೇಳಿದೆ ಎಂದು ಹೇಳಿದ್ದಾರೆ. ವಿಜಯ್ ಅವರ ಕೋರಿಕೆಯ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಜನಾದೇಶವು ಸಂವಿಧಾನವನ್ನು ಅಕ್ಷರಶಃ ರಕ್ಷಿಸಲು ಬದ್ಧವಾಗಿರುವ ಜಾತ್ಯತೀತ ಸರ್ಕಾರಕ್ಕೆ ಎನ್ನುವುದು ಕಾಂಗ್ರೆಸ್‌ ಮನಗಂಡಿದೆ. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ತಮಿಳುನಾಡಿನಲ್ಲಿ ಸರ್ಕಾರವನ್ನು ರಚನೆ ಮಾಡುವುದಕ್ಕೆ ಅವಕಾಶ ಮಾಡಿಕೊಡಬಾರದು ಎನ್ನುವುದು ಕಾಂಗ್ರೆಸ್ ಪಕ್ಷದ ದೃಢ ನಿರ್ಧಾರವಾಗಿದೆ ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.

ಟಿವಿಕೆ ತಮಿಳುನಾಡಿನಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತ ಸಿಕ್ಕಿಲ್ಲ. ಟಿವಿಕೆಗೆ ಸರಳ ಬಹುಮತಕ್ಕೆ 118 ಸ್ಥಾನಗಳು ಬೇಕಾಗುತ್ತದೆ. ತಮಿಳುನಾಡಿನ ವಿಧಾನಸಭೆಯು 234 ಸದಸ್ಯರ ಬಲವನ್ನು ಹೊಂದಿದೆ. ಟಿವಿಕೆ 108 ಸ್ಥಾನಗಳನ್ನು ಗೆದಿದ್ದು, ಈ ಪಕ್ಷಕ್ಕೆ 10 ಸ್ಥಾನಗಳ ಕೊರತೆ ಇದೆ. ಡಿಎಂಕೆ ನೇತೃತ್ವದ ಮೈತ್ರಿಕೂಟ 73 ಸ್ಥಾನಗಳಲ್ಲಿ ಗೆದ್ದಿದ್ದು, ಡಿಎಂಕೆ 59 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್ ಸ್ಪರ್ಧಿಸಿದ್ದ 28 ಸ್ಥಾನಗಳಲ್ಲಿ ಐದರಲ್ಲಿ ಗೆದ್ದಿದೆ. ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇದಕ್ಕೂ ಮೊದಲು ವಿಸಿಕೆ ಅಧ್ಯಕ್ಷ ಥೋಲ್ ತಿರುಮಾವಲವನ್ ಅವರು ಪಕ್ಷವು ವಿಜಯ್ ಅವರಿಗೆ ಬೆಂಬಲ ನೀಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಎಡ ಮಿತ್ರಪಕ್ಷಗಳೊಂದಿಗೆ ಸಮಾಲೋಚಿಸಿದ ನಂತರವೇ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಡಿಎಂಡಿಕೆ ನಾಯಕಿ ಪ್ರೇಮಲತಾ ವಿಜಯಕಾಂತ್ ಅವರು ಸಹ ವಿಜಯ್ ಅವರಿಗೆ ಯಾವುದೇ ಬಾಹ್ಯ ಬೆಂಬಲ ನೀಡುವುದನ್ನು ನಿರಾಕರಿಸಿದ್ದಾರೆ. ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ)ದಲ್ಲಿ ನಾವು ಮುಂದುವರಿಯುವುದಕ್ಕೆ ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ ಎಡ ಪಕ್ಷಗಳ ನಾಯಕರು ಸಮಯ ಬಂದಾಗ ನಿರ್ಧರಿಸುವುದಾಗಿ ಹೇಳಿದ್ದಾರೆ.

ಇನ್ನು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಟಿವಿಕೆ ಅಧಿಕಾರಕ್ಕೆ ಬಂದರೆ ತಮಿಳುನಾಡು ಹಾಗೂ ಕರ್ನಾಟಕದ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಮೇಕೆದಾಟು ಯೋಜನೆಗಳಿಗೆ ಪರಿಹಾರ ಸಿಗುವ ಸಾಧ್ಯತೆ ಇದೆ. ಇದಕ್ಕೆ ತಾರ್ಕಿಕ ಪರಿಹಾರ ಸಿಗದೆ ಇದ್ದರೂ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಕಡಿಮೆ ಎಂದೇ ವಿಶ್ಲೇಷಿಸಲಾಗುತ್ತಿದೆ.

Leave a Comment

Your email address will not be published. Required fields are marked *