ಸಮಗ್ರ ನ್ಯೂಸ್: ಟ್ಯಾಂಕರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸವಣೂರು ಬಳಿ ಅಪಘಾತ ನಡೆದಿದೆ.
ಮಿತ್ತೂರಿನ ಯಜ್ಞೇಶ್(21), ಆರ್ಲಪದವು ನಿವಾಸಿ ಜಗನ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತ ಕಂಡು ಬ್ರೇಕ್ ಹಾಕಿದ ಮತ್ತೊಂದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ವಾಟರ್ ಟ್ಯಾಂಕರ್ ಕಂದಕಕ್ಕೆ ಉರುಳಿ ಬಿದ್ದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದು, ಇಂಟರ್ನ್ಷಿಪ್ಗಾಗಿ ಆಸ್ಟ್ರೇಲಿಯಾಕ್ಕೆ ಹೋಗಿ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ಯುವಕರಿಬ್ಬರು ಕೆಲಸದ ನಿಮಿತ್ತ ಆಲಂಕಾರಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಸ್ಕೂಟರ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ ಬೈಕ್ ಟ್ಯಾಂಕರ್ನ ಚಕ್ರದಡಿಗೆ ಸಿಲುಕಿದೆ. ಬಳಿಕ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತ ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







