ಸಮಗ್ರ ನ್ಯೂಸ್: ‘ಹಿಂದುತ್ವ ಎಂಬುದು ಜೀವನ ವಿಧಾನ. ಈ ನಂಬಿಕೆಯನ್ನು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇಬೇಕೆಂದಿಲ್ಲ; ಮನೆಯೊಳಗೆ ದೀಪ ಹಚ್ಚಿದರೂ ಸಾಕು’ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಶಬರಿಮಲೆ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿತು.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ್ ಕುಮಾರ್, ಅಗಸ್ಟೀನ್ ಜಾರ್ಜ್ ಮಸೀಹ್, ಪ್ರಸನ್ನ ಬಿ.ವರಾಳೆ, ಆರ್.ಮಹದೇವನ್ ಮತ್ತು ಜಾಯ್ಮಾಲ್ಯಾ ಬಾಗ್ಚಿ ಅವರನ್ನು ನ್ಯಾಯಪೀಠವು ಒಳಗೊಂಡಿದೆ.
ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾ.ನಾಗರತ್ನ ಅವರು, ‘ಹಿಂದೂಗಳು ಸಂಪ್ರದಾಯವಾದಿ ಆಗಬೇಕೆಂದಿಲ್ಲ’ ಎಂದು ಹೇಳಿದರು.
ಇದಕ್ಕೂ ಮುನ್ನ, ‘ಪ್ರತಿಯೊಂದು ಧಾರ್ಮಿಕ ಆಚರಣೆ ಅಥವಾ ಧಾರ್ಮಿಕ ವಿಚಾರಗಳ ಬಗ್ಗೆ ನ್ಯಾಯಾಲಯಗಳಲ್ಲಿ ಪ್ರಶ್ನಿಸುತ್ತಾ ಹೋದರೆ ನೂರಾರು ಅರ್ಜಿಗಳ ವಿಚಾರಣೆ ನಡೆಸಬೇಕಾಗುತ್ತದೆ. ಇದರಿಂದಲೇ ಪ್ರತಿಯೊಂದು ಧರ್ಮವು ‘ವಿಭಜನೆ’ಯಾಗುತ್ತದೆ’ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.







