ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ವಿವಾದಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದ ಸಂಧಾನ ಯಶಸ್ವಿಯಾಗಿದ್ದು, ರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆ ನಂತರ, ರಾಜೀನಾಮೆ ಗೊಂದಲಕ್ಕೆ ಅಂತ್ಯ ಹಾಡಲಾಗಿದೆ.
ಸಭೆಯ ಬಳಿಕ ಮಾತನಾಡಿದ ಸುರ್ಜೇವಾಲ ಅವರು, ‘ರಾಮಲಿಂಗಾರೆಡ್ಡಿ ನಮ್ಮ ಹಿರಿಯ ನಾಯಕರು. ಅವರು ಪಕ್ಷಕ್ಕೆ ಬಹುಮುಖ್ಯವಾದ ಅನುಭವ ಹೊಂದಿದ್ದಾರೆ. ಅವರ ರಾಜೀನಾಮೆ ವಾಪಸ್ ಪಡೆಯಲಾಗಿದೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿಯುತ್ತಾರೆ’ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.
ರಾಜೀನಾಮೆ ವಾಪಸ್ ಪಡೆದಿರುವುದನ್ನು ದೃಢಪಡಿಸಿದರೂ, ಖಾತೆ ಹಂಚಿಕೆ ವಿಚಾರ ಇನ್ನೂ ಸಂಪೂರ್ಣ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ, ಜಲಸಂಪನ್ಮೂಲ ಖಾತೆಯ ಜೊತೆಗೆ ಇನ್ನೆರಡು ಹೆಚ್ಚುವರಿ ಖಾತೆಗಳನ್ನು ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಅದನ್ನು ಸ್ವೀಕರಿಸುವ ಕುರಿತು ರೆಡ್ಡಿ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.
ಸಭೆಯ ಸಮಯದಲ್ಲಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಎಲ್ಲರೂ ಸೇರಿ ರೆಡ್ಡಿಯನ್ನು ಮನವೊಲಿಸಲು ಯಶಸ್ವಿಯಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಆದರೆ, ಅಧಿಕೃತವಾಗಿ ಅವರು ರಾಜೀನಾಮೆ ವಾಪಸ್ ಪಡೆದಿರುವುದರಿಂದ ಕಾಂಗ್ರೆಸ್ ಪಾಳಯದಲ್ಲಿ ತಾತ್ಕಾಲಿಕವಾಗಿ ಗೊಂದಲ ಶಮನಗೊಂಡಂತಾಗಿದೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳು ಬಗೆಹರಿದಿವೆ ಎಂದು ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.








