ಸಮಗ್ರ ನ್ಯೂಸ್: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ಮುಂದೆ ವಕೀಲ ನರೇಂದ್ರ ಮಿಶ್ರಾ ಅವರು ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು. NEET ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಅತಿರೇಕದ ಕ್ರಮ ಕೈಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.ವಕೀಲರು ಪ್ರತಿಭಟನೆ ವೇಳೆ ಪೊಲೀಸರು ಕೈಗೊಂಡ ಕ್ರಮಗಳನ್ನು ತೋರಿಸುವ ವಿಡಿಯೋಗಳಿವೆ ಎಂದು ಹೇಳಿದಾಗ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ನಮಗೆ ವಿಡಿಯೋಗಳಲ್ಲಿ ಆಸಕ್ತಿ ಇಲ್ಲ; ಅವುಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ” ಎಂದು ಹೇಳಿದರು.
ತುರ್ತು ವಿಚಾರಣೆಗೆ ಮನವಿ ಮಾಡಿದಾಗ, ನ್ಯಾಯಪೀಠವು “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ತಿಳಿಸಿತು.ವಿದ್ಯಾರ್ಥಿಗಳು NEET ಪರೀಕ್ಷೆಯ ಸರಿಯಾದ ನಿರ್ವಹಣೆ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸುಧಾರಣೆ ಸೇರಿದಂತೆ ಪ್ರಮುಖ ವಿಷಯಗಳನ್ನು ಎತ್ತುತ್ತಿದ್ದಾರೆ ಎಂದು ವಕೀಲರು ವಾದಿಸಿದರು. ಆದರೆ ನ್ಯಾಯಪೀಠವು ಅರ್ಜಿಯನ್ನು ತಕ್ಷಣ ವಿಚಾರಣೆ ನಡೆಸಲು ನಿರಾಕರಿಸಿತು.
ಅರ್ಜಿಯಲ್ಲಿ ದೆಹಲಿಯ ಜಂತರ್ ಮಂತರ್ನಿಂದ ಸಂಸತ್ ಭವನದವರೆಗೆ ನಡೆದ ‘ಸಂಸತ್ ಚಲೋ’ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಲಾಗಿತ್ತು.ಸುಪ್ರೀಂ ಕೋರ್ಟ್ನ ಈ ನಿರ್ಧಾರಕ್ಕೂ ಒಂದು ದಿನ ಮೊದಲು ದೆಹಲಿ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿತ್ತು. ಹೈಕೋರ್ಟ್, “ನ್ಯಾಯಾಲಯವನ್ನು ಈ ವಿಷಯಕ್ಕೆ ಎಳೆಯಬೇಡಿ” ಎಂದು ಹೇಳಿತ್ತು.








