ಸಮಗ್ರ ನ್ಯೂಸ್: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿರುವ ವೇಳೆ ಚುನಾವನಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ.
ಇದೀಗ ಸಿದ್ದರಾಮಯ್ಯನವರು ಚುನಾವಣಾ ರಾಜಕೀಯ ನಿವೃತ್ತಿಯಾಗಿರುವುದ್ಯಾಕೆ ಎನ್ನುವುದನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ಕಾರಣ ಬಿಚ್ಚಿಟ್ಟಿದ್ದಾರೆ.
- ‘ ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ’ ಎಂದಿದ್ದಾರೆ.
- ‘ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷವಾಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು – ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ’ ಎಂದು ಹೇಳಿದ್ದಾರೆ.
- ‘ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ. ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.








