ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತದ ಪರಿಚಲನೆ ಸಕ್ರಿಯಗೊಂಡಿದ್ದು, ದೇಶದ ಹಲವು ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಮಾನ್ಸೂನ್ ಟ್ರಫ್ ಸಕ್ರಿಯವಾಗಿರುವುದರಿಂದ ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಒಡಿಶಾದಲ್ಲಿ ಅತಿ ಭಾರೀ ಮಳೆಯ ಮುನ್ಸೂಚನೆ ಇದೆ.
ಕೇರಳ ಮತ್ತು ಮಾಹೆ ಪ್ರದೇಶಗಳಿಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಮೇಲಿನ ವಾತಾವರಣದಲ್ಲಿ ವಾಯುಭಾರ ಕುಸಿತವು ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೆ ವಿಸ್ತರಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಮತ್ತಷ್ಟು ತೀವ್ರಗೊಳ್ಳಲಿದೆ. ಸಾರ್ವಜನಿಕರು ಹಾಗೂ ಕರಾವಳಿ ಭಾಗದ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.








