ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂಡಡ್ಕ ಜಲಪಾತಕ್ಕೆ ಬಂದಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪ್ರಾಪ್ತ ವಯಸ್ಕ ಬಾಲಕ, ತನ್ನ ನಾಲ್ವರು ಸಹಪಾಠಿಗಳೊಂದಿಗೆ ಕಡಬದ ಕುಂಡಡ್ಕ ಫಾಲ್ಸ್ ಗೆ ತೆರಳಿ ಆಟವಾಡುತ್ತಿದ್ದಾಗ, ಅಲ್ಲಿಗೆ ಬಂದ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ ಹಾಗೂ ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದು, ಆರೋಪಿಗಳು ಜೊತೆ ಸೇರಿ ಬಾಲಕನಿಗೆ ಅವ್ಯಾಚವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಆ.3 ರಂದು ನಡೆದಿದ್ದು, ಆ.11ರಂದು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.








