ಸಮಗ್ರ ನ್ಯೂಸ್: ‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದ ಎಚ್ಚರಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಪೊಲೀಸ್ ಠಾಣೆಗೆ ನುಗ್ಗುವವರಿಗೆ ಮುಕ್ತ ಆಹ್ವಾನವಿದೆ. ಠಾಣೆಗೆ ನುಗ್ಗಿದ ಬಳಿಕ ನೇರವಾಗಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವದ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ನೀಡಿರುವ ಎಚ್ಚರಿಕೆ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಿಂದೂ ಯುವಕರೊಂದಿಗೆ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ್ದ ಇನ್ಸ್ಪೆಕ್ಟರ್, ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಹಾಗೂ ಪೊಲೀಸರು ನಿಗದಿಪಡಿಸುವ ಮಾರ್ಗದಲ್ಲೇ ಗಣೇಶನ ಮೆರವಣಿಗೆ ನಡೆಸುವಂತೆ ಸೂಚಿಸಿದ್ದರು.
ಟಿ. ನರಸೀಪುರ ಲಿಂಕ್ ರಸ್ತೆಯಲ್ಲಿ ಮೆರವಣಿಗೆ ನಡೆಸುವಂತಿಲ್ಲ. ಮಸೀದಿ ಮುಂದೆ ಮೆರವಣಿಗೆ ಹೋಗಲು ಅವಕಾಶವಿಲ್ಲ. ನಿಯಮ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಸ್ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಪ್ರತಾಪ್ ಸಿಂಹ, ಇನ್ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ್ದರು. ‘ಯಾರನ್ನ ಧಮ್ಕಿ ಹಾಕ್ತೀರಾ? ಮತ್ತೊಮ್ಮೆ ಆ ಮಾತು ಆಡಿದರೆ ನಾನೇ ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದರು. ಪೊಲೀಸರ ಕರ್ತವ್ಯ ನಿರ್ವಹಿಸುವ ರೀತಿಯ ಬಗ್ಗೆಯೂ ಅವರು ಪ್ರಶ್ನೆ ಎತ್ತಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಪ್ರತಾಪ್ ಸಿಂಹ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬರು ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾರೆ ಎಂದು ಟೀಕಿಸಿದ್ದಾರೆ. ಅಸ್ತಿತ್ವ ಕಳೆದುಕೊಂಡು ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ವ್ಯಕ್ತಿಯೊಬ್ಬರು ಆಗಾಗ ಮಾಧ್ಯಮಗಳ ಮುಂದೆ ಬಂದು ಅಸಂಬದ್ಧ ಹೇಳಿಕೆ ನೀಡುವ ಮೂಲಕ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದಿರುವ ವ್ಯಕ್ತಿಗೆ ಮುಕ್ತ ಆಹ್ವಾನವಿದೆ. ಠಾಣೆಗೆ ನುಗ್ಗಿದ ಬಳಿಕ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.










