ಸಮಗ್ರ ನ್ಯೂಸ್: ರಾಜ್ಯದ ಬಡವರು, ದಿನಗೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ (ರೇಷನ್ ಅಂಗಡಿ) ಕಾರ್ಯನಿರ್ವಹಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಜನರ ಹಸಿವು ನೀಗಿಸುವುದು ಹಾಗೂ ಪ್ರತಿಯೊಬ್ಬ ಅರ್ಹ ಬಡವರಿಗೂ ಸೌಲಭ್ಯ ತಲುಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪಾರದರ್ಶಕಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಬೆಳಿಗ್ಗೆಯಿಂದ ಸಂಜೆಯವರೆಗೆ ಬೆವರು ಸುರಿಸಿ ದುಡಿಯುವ ದಿನಗೂಲಿ ಕಾರ್ಮಿಕರು, ಆಟೋ ಚಾಲಕರು ಹಾಗೂ ಕಟ್ಟಡ ಕಾರ್ಮಿಕರು ಪಡಿತರ ಧಾನ್ಯ ಪಡೆಯಲು ತಮ್ಮ ದಿನದ ಸಂಪಾದನೆಯನ್ನು ತ್ಯಾಗ ಮಾಡಿ ಸರದಿಯಲ್ಲಿ ನಿಲ್ಲಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ಅಕ್ಟೋಬರ್ 1, 2026 ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7:00 ರಿಂದ ಮಧ್ಯಾಹ್ನ 12:00 ರವರೆಗೆ ಹಾಗೂ ಸಂಜೆ 4:00 ರಿಂದ ರಾತ್ರಿ 8:00 ರವರೆಗೆ ತೆರೆದಿರಲಿವೆ. ಇದರಿಂದಾಗಿ ಶ್ರಮಿಕರು ಕೆಲಸಕ್ಕೆ ತೆರಳುವ ಮುನ್ನ ಅಥವಾ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುವಾಗ ತಮಗೆ ಅನುಕೂಲಕರವಾದ ಸಮಯದಲ್ಲಿ ಗೌರವಯುತವಾಗಿ ಪಡಿತರ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.










