ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ಬಗ್ಗೆ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಗೆ ಹೊಸ ತಲೆನೋವು ಶುರುವಾಗಿದೆ.
ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ರಾಜೇಂದ್ರ ಕುಮಾರ್, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಯಾವುದೇ ಒಂದು ಪಕ್ಷದಿಂದ ಸ್ಪರ್ಧಿಸಲ್ಲ. ಸ್ಪರ್ಧಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಆಪ್ತರು, ಅಭಿಮಾನಿಗಳು ಎಲ್ಲರೂ ನನಗೆ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ. ಎರಡು- ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಸೋಲು- ಗೆಲುವು ನನಗೆ ಮುಖ್ಯವಲ್ಲ. ಯಾವುದೇ ಕಾರಣಕ್ಕೂ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ಪಕ್ಷೇತರನಾಗಿ ಮಾತ್ರ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸಹಕಾರಿಗಳಿಂದ ಒತ್ತಡ ಇದೆ. ಶೇ 50ರಷ್ಟು ಸಹಕಾರಿಗಳೇ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಶೇಕಡಾ 30ರಷ್ಟು ಪಂಚಾಯತ್ ಸದಸ್ಯರಿದ್ದಾರೆ. ಹೀಗಾಗಿ ಪರಿಷತ್ ಕ್ಷೇತ್ರವನ್ನು ಸಹಕಾರ ಕ್ಷೇತ್ರಕ್ಕೂ ಮೀಸಲಿಡಬೇಕು ಎಂದು ಒತ್ತಾಯ ಮಾಡುತ್ತೇನೆ. ನ.17ರಂದು ನನ್ನ ಸ್ಪರ್ಧೆಯ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ. ಸಾಧ್ಯವಾದರೆ ಅದೇ ದಿನ ನಾಮಪತ್ರವನ್ನೂ ಸಲ್ಲಿಸುತ್ತೇನೆ ಎಂದು ಹೇಳಿದರು.
ಸ್ಥಳೀಯಾಡಳಿತ ಕ್ಷೇತ್ರದಿಂದ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪ್ರತಾಪಚಂದ್ರ ಶೆಟ್ಟಿ ಸ್ಥಾನಗಳು ಇದೇ ಡಿಸೆಂಬರ್ ವೇಳೆಗೆ ತೆರವಾಗಲಿದ್ದು ಆ ಸ್ಥಾನಗಳಿಗೆ ಡಿ.10 ರಂದು ಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಘೋಷಣೆಗೆ ಮೊದಲೇ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ತಮ್ಮ ಸ್ಪರ್ಧೆಯ ಬಗ್ಗೆ ಮಾಹಿತಿ ಹೊರಬಿಟ್ಟು ಕಣದಲ್ಲಿ ಸಂಚಲನ ಮೂಡಿಸಿದ್ದಾರೆ.







