ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟಿರುವ ಡಯಾಲಿಸಿಸ್ ಘಟಕಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದ ಐದು ಯಂತ್ರಗಳೂ ಕೈಕೊಟ್ಟಿದ್ದು, ಇದರಿಂದ ಕಳೆದ ಕೆಲವು ದಿನಗಳಿಂದ ರೋಗಿಗಳಿಗೆ ಸಮಸ್ಯೆಯಾಗಿತ್ತು. ಡಯಾಲಿಸಿಸ್ ಘಟಕದ ನಿರ್ವಹಣೆಯನ್ನು ಹೊರಗುತ್ತಿಗೆ ನೀಡಲಾಗಿದ್ದು, ಗುತ್ತಿಗೆ ಪಡೆದುಕೊಂಡ ‘ಸಂಜೀವಿನಿ’ ಸಂಸ್ಥೆಯು ಘಟಕದ ನಿರ್ವಹಣೆಯನ್ನು ಮಾಡಿರಲಿಲ್ಲ. ಇದರಿಂದ ಆಸ್ಪತ್ರೆಗೆ ಬರುವ ಬಡರೋಗಿಗಳು ಡಯಾಲಿಸಿಸ್ ಮಾಡಿಕೊಳ್ಳಲಾಗದೇ ತೊಂದರೆ ಅನುಭವಿಸಿದ್ದರು.
ಈ ಕುರಿತಂತೆ ಶಾಸಕ ಸಂಜೀವ ಮಠಂದೂರು ಸೇರಿದಂತೆ ತಾಲೂಕಿನ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ರೋಗಿಗಳ ಸಂಬಂಧಿಕರು ಹಾಗೂ ಸಾರ್ವಜನಿಕರು ದೂರು ನೀಡಿದ್ದರು. ಶಾಸಕ ಸಂಜೀವ ಮಠಂದೂರುರವರು ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ ಎಂದು ಹೇಳಲಾಗಿದೆ.
ಈ ಕುರಿತು ಇಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ಮಾತನಾಡಿದ್ದು, ಶೀಘ್ರದಲ್ಲೇ ಘಟಕದ ನಿರ್ವಹಣೆ ಹಾಗೂ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಎರಡು ಘಟಕಗಳು ಕಾರ್ಯಾರಂಭ ಮಾಡಿದ್ದು, ಇನ್ನುಳಿದ ಮೂರು ಯಂತ್ರಗಳು ನಾಳೆಯೊಳಗೆ ದುರಸ್ಥಿಯಾಗುತ್ತದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.






