ಸಮಗ್ರ ನ್ಯೂಸ್ : ಕಾಂಗ್ರೆಸ್ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಸಚಿವರು, ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿದ್ದು ಕಾನೂನು ತಜ್ಞರ ಜತೆ ಚರ್ಚಿಸಿ ಶೀಘ್ರ ಇತ್ಯರ್ಥಗೊಳಿಸಲಾಗುವುದು. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರೇರಿತ ಮೇಕೆದಾಟು ಪಾದಯಾತ್ರೆ ಬಿಟ್ಟು ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಲು ಸದನಕ್ಕೆ ಬರಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮೊದಲ ಹಂತದ ಪಾದಯಾತ್ರೆಯಲ್ಲಿ ರಾಜ್ಯದ ಜನರಿಗೆ ಕೊರೋನಾ ಹಂಚಲಾಯಿತು. ಎರಡನೇ ಹಂತದ ಪಾದಯಾತ್ರೆಯಲ್ಲಿ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದ ಸವಾರರು ಕಿರಿಕಿರಿ ಅನುಭವಿಸಿದರು. ಪಾದಯಾತ್ರೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೋಟ ಟೀಕಿಸಿದರು.






