ಸಮಗ್ರ ನ್ಯೂಸ್: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.
ಈ ವಿಚಾರವಾಗಿ ಗುರುವಾರದಂದು ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಸುಬೀರ್ ಚಕ್ರವರ್ತಿ ಹೇಳಿದರು.
ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.ಈ ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.




























