ಸಮಗ್ರ ನ್ಯೂಸ್: ಬೈಕ್ ಅಪಘಾತದಲ್ಲಿ ಸವಾರನಿಗೆ ಕಾಲಿಗೆ ಗಾಯವಾಗಿದ್ದು, ಗಾಯದಲ್ಲಿ ಸುಮಾರು 14 ಕಲ್ಲುಗಳಿದ್ದರೂ ಅವನ್ನು ನಿರ್ಲಕ್ಷಿಸಿ, ಹೊಲಿಗೆ ಹಾಕಿದ ಪರಿಣಾಮ ಗಾಯ ಉಲ್ಬಣಗೊಂಡು ಗಾಯಾಳು ಕಂಗಲಾದ ಘಟನೆ ಕಡಬದಲ್ಲಿ ನಡೆದಿದೆ.
ಗಾಯ ಊತವಾಗಿ ಪರಿಣಮಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ಮೂಲಕ ಕಲ್ಲುಗಳನ್ನು ಹೊರತೆಗೆಯಲಾಗಿದೆ.
ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ರೈಲ್ವೇ ಉದ್ಯೋಗಿ ಪುರುಷೋತ್ತಮ ಎಂಬವರು ಏ.25ರಂದು ಕೋಡಿಂಬಾಳ ಸಮೀಪದ ಉಂಡಿಲ ಎಂಬಲ್ಲಿ ಸ್ಕೂಟಿ ಸ್ಕೀಡ್ ಆಗಿ ಬಿದ್ದು ಕಾಲಿಗೆ ಗಾಯವಾಗಿತ್ತು, ಗಾಯಾಳುಗಳನ್ನು ಪುರುಷೋತ್ತಮ ಹಾಗೂ ಅವರ ಪತ್ನಿಯನ್ನು ಸ್ಥಳೀಯರು ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದಿದ್ದರು. ಆ ಸಮಯದಲ್ಲಿ ಆಸ್ಪತ್ರೆಯ ವೈದ್ಯರು ಗಾಯಕ್ಕೆ ಸ್ಟಿಚ್ ಹಾಕುವಂತೆ ಸೂಚಿಸಿದ್ದರು. ಈ ಸಂದರ್ಭದಲ್ಲಿ ದಾದಿಯರು ಹಾಗೂ ಸಿಬ್ಬಂದಿಗಳು ಗಾಯಕ್ಕೆ ಸ್ಟಿಚ್ ಹಾಕಿದ್ದರು.
ನಂತರ ಈ ವಾರದ ಬಳಿಕವೂ ಗಾಯ ಗುಣವಾಗದೆ ಮತ್ತೆ ಗಾಯ ಉಲ್ಬಣಗೊಂಡಿತ್ತು, ಈ ಬಗ್ಗೆ ಪುರುಷೋತ್ತಮ ಅವರು ಮೇ.4ರಂದು ಕಡಬದ ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ನಲ್ಲಿ ಗಾಯದ ಎಕ್ಸರೆ ತೆಗೆಸಿದ್ದರು, ಇದೇ ಸಮಯದಲ್ಲಿ ಆ ಕ್ಲಿನಿಕ್ ನಲ್ಲಿದ್ದ ತಜ್ಞ ವೈದ್ಯರು ಎಕ್ಸರೆ ಪರಿಶೀಲಿಸಿ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು, ಈ ಕಾರಣದಿಂದಾಗಿ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಮೇ.4ರಂದು ರಾತ್ರಿ ಸರ್ಜರಿ ನಡೆಸಲಾಗಿದ್ದು ಈ ವೇಳೆ ವೈದ್ಯರಿಗೆ ಬರೋಬ್ಬರಿ 14 ಕಲ್ಲುಗಳು ದೊರೆತಿದ್ದು, ಗಾಯವಾದ ಆ ದಿನವೇ ಸ್ಟಿಚ್ ಮಾಡುವಾಗ ಸರಿಯಾಗಿ ಶುಚಿಗೊಳಿಸಿ ಸ್ಟಿಚ್ ಮಾಡುತ್ತಿದ್ದರೆ ಗಾಯ ಉಲ್ಬಣಗೊಳ್ಳುವ ಪ್ರಮೇಯ ಉಂಟಾಗುತ್ತಿರಲಿಲ್ಲ ಎಂದು ವೈದ್ಯರ ಮೂಲದಿಂದ ಮಾಹಿತಿ ತಿಳಿದು ಬಂದಿದೆ.
ಇದೀಗ ಸಾರ್ವಜನಿಕರಲ್ಲಿ ಕಡಬ ಸಮುದಾಯದ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರು, ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯಿಂದಾಗಿ ಕಡಬ ಆಸ್ಪತ್ರೆಯ ಸಿಬ್ಬಂದಿಗಳ ಬೇಜವಾಬ್ದಾರಿ ಎತ್ತಿ ತೋರುತ್ತಿದೆ, ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಮೇಲಾಧಿಕಾರಿಗಳು ಈ ಆಸ್ಪತ್ರೆಯಲ್ಲಿ ಸಾಮಾನ್ಯ ಜನರ ಮೇಲೆ ನಡೆಯುವ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯನ್ನು ಗಮನಿಸಬೇಕಿದೆ.






