ಮದೆನಾಡು ಗುಡ್ಡದಲ್ಲಿ ಭಾರೀ ಬಿರುಕು| ಸಂಚಾರ ಕಡಿತದ ಭೀತಿಯಲ್ಲಿ ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ| ರಾತ್ರಿ ಸಂಚಾರ ನಿರ್ಬಂಧ

ಸಮಗ್ರ ನ್ಯೂಸ್: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿತದೊಂದಿಗೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ.

Ad Widget ... ..

ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ.

Ad Widget

ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

ಮಹಾಮಳೆಯೊಂದಿಗೆ ಪ್ರಾಕೃತಿಕ ವಿಕೋಪಗಳು ಘಟಿಸಿದ 2018ನೇ ಸಾಲಿನಲ್ಲಿ ಈಗ ಬಿರುಕು ಬಿಟ್ಟಿರುವ ಬೆಟ್ಟ ಪ್ರದೇಶದಲ್ಲೆ ಭಾರೀ ಪ್ರಮಾಣದ ಭೂ ಕುಸಿತವುಂಟಾಗಿ, ರಾಷ್ಟ್ರೀಯ ಹೆದ್ದಾರಿ ಕುಸಿದು ಸಂಪರ್ಕ ಕಡಿತಗೊಂಡಿತ್ತು. ಇದೀಗ ಮತ್ತೆ ಇದೇ ಪ್ರದೇಶದ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿದೆ.

ಶಾಸಕ ಕೆ.ಜಿ.ಬೋಪಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ಬಳಿ ಮಣ್ಣು ಕುಸಿಯುವ ಸಾಧ್ಯತೆ ಇದ್ದು, ಈ ಸಂಬಂಧ ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ವಿದ್ಯುತ್ ಮಾರ್ಗ ಬದಲಿಸಲಾಗುತ್ತಿದೆ ಎಂದರು.

ಹೆದ್ದಾರಿಯಲ್ಲಿ ಮಣ್ಣು ಕುಸಿದರೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಮಳೆಯ ನಡುವೆಯೂ ಸೆಸ್ಕ್ ಇಲಾಖೆಯ ಸಿಬ್ಬಂದಿಗಳು ವಿದ್ಯುತ್ ಮಾರ್ಗವನ್ನು ಬದಲಾಯಿಸಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಮುರುಗೇಶ್ ಇತರರು ಇದ್ದರು.

ಮಡಿಕೇರಿ- ಸಂಪಾಜೆ ರಸ್ತೆಯಲ್ಲಿ ಆ.9 ರಾತ್ರಿಯಿಂದ ಆ.10 ರ ಬೆಳಗ್ಗೆ 6.30 ರವರೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Leave a Comment

Your email address will not be published. Required fields are marked *