ಸಮಗ್ರ ನ್ಯೂಸ್: ಇತ್ತಿಚೆಗೆ ಮಂಡ್ಯದ ಕೆರಗೋಡ ಹನುಮ ಧ್ವಜ ತೆರವುನ ವಿರೋಧಿಸಿ ಬಿಜೆಪಿ ಮಾಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಆದೆ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಕೇಸರಿ ಶಾಲ ಧರಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇದರ ಮಧ್ಯೆ ಇದೀಗ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು, ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ಅಲ್ಲದೇ ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಹೇಳಿದ್ದಾರೆ.
ನಾನು ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಕೊನೆಗೆ ಸಮರ್ಥಿಸಿಕೊಂಡರು.
ಈ ವಿಚಾರ ತಿಳಿಯುತ್ತಿದ್ದಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿ ನಮ್ಮ ರಾಷ್ಟ್ರ ಧ್ವಜದಲ್ಲಿ ಯಾವ ಬಣ್ಣಗಳಿವೆ ಎಂಬುವುದು ಕಾಂಗ್ರೆಸ್ನವರಿಗೆ ತಿಳಿದಿಲ್ಲವೆ? ರಾಷ್ಟ್ರ ಧ್ವಜದಿಂದ ಕೇಸರಿ ಬಣ್ಣ ತೆಗೆದರೆ ಏನು ಅರ್ಥ ಉಳಿಯುತ್ತದೆ. ಕೇಸರಿ ಬಣ್ಣದ ಮೇಲೆ ಅಸಹನೆ, ಸಂಕುಚಿತ ಭಾವನೆ ಏಕೆ? ನಾನು ಕೇಸರಿ ಶಾಲು ಹಾಕಿಕೊಂಡಿದ್ದರ ಬಗ್ಗೆ ಮಾತನಾಡುತ್ತಿದ್ದಾರೆ. ದಲಿತ ಸಮುದಾಯ ಬಂಧುಗಳು ಸಭೆಗೆ ಕರೆದಾಗ ಅಲ್ಲಿಗೆ ಹೋಗಿ ಜೈ ಭೀಮ್ ಕಾರ್ಯಕರ್ತರು ಧರಿಸುವ ನೀಲಿ ಬಣ್ಣದ ಶಾಲನ್ನೂ ಹಾಕಿದ್ದೇನೆ. ಇದು ಇವರ ಕಣ್ಣಿಗೆ ಕಾಣಲಿಲ್ಲವೆ ಎಂದು ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡು ಕಾಂಗ್ರೆಸ್ಗೆ ತಿರುಗೇಟು ನೀಡಿದ್ದರು.







