ಸಮಗ್ರ ನ್ಯೂಸ್: ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ ನಾಯಕಿ ಸೀಮಾ ಕುಶ್ವಾಹಾ ಅವರು ಸೋಮವಾರ ಬಿಜೆಪಿ ಸೇರ್ಪಡೆಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಪಕ್ಷಕ್ಕೆ ಸ್ವಾಗತಿಸಿದರು. ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಕ್ಕೆ ಕುಶ್ವಾಹಾ ಅವರು 2022 ರ ಜನವರಿಯಲ್ಲಿ ಸೇರಿದ್ದರು.
ಸೀಮಾ ಅವರು ನಿರ್ಭಯಾ ಜ್ಯೋತಿ ಟ್ರಸ್ಟ್ ಸ್ಥಾಪಿಸಿದರು ಮತ್ತು ಅತ್ಯಾಚಾರ ಸಂತ್ರಸ್ತರ ಪರವಾಗಿ ನ್ಯಾಯಕ್ಕಾಗಿ ವಕೀಲರ ಅಭಿಯಾನವನ್ನು ಪ್ರಾರಂಭಿಸಿದರು. ನಿರ್ಭಯಾ ಅತ್ಯಾಚಾರ ಪ್ರಕರಣವು 2012 ರಲ್ಲಿ ರಾಷ್ಟ್ರದಾದ್ಯಂತ ಭಾರಿ ಸುದ್ದಿಯಾಗಿತ್ತು. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು 2020 ರ ಮಾರ್ಚ್ 20 ರಂದು ದೆಹಲಿಯ ತಿಹಾರ್ ಜೈಲಿನಲ್ಲಿ ಬೆಳಿಗ್ಗೆ 5:30 ಕ್ಕೆ ಗಲ್ಲಿಗೇರಿಸಲಾಯಿತು.








