ಸಮಗ್ರ ನ್ಯೂಸ್: ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನಡೆದಿದೆ.ಅಸ್ವಸ್ಥಗೊಂಡವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೂನ್ 26ರಿಂದ 29ರವರೆಗೆ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನರು ಸೇರಿದ್ದರು.
ಇಂದು (ಜೂ.29) ಅನ್ನದಾನ ಕಾರ್ಯಕ್ರಮಕ್ಕೆ ಸುಮಾರು 30-40 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿತ್ತು. ಆದರೆ, ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಿರೀಕ್ಷೆಗೂ ಮೀರಿ ಜನರು ಸೇರಿದ್ದರಿಂದ ನೂಕುನುಗ್ಗಲಾಗಿದೆ. ಇದರಿಂದ ಉಸಿರಾಟದ ತೊಂದರೆಯಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಭಾರೀ ಜನಸ್ತೋಮದಿಂದಾಗಿ ಪುತ್ತೂರು-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.






