ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಸಾವುಗಳ ಕುರಿತು ವರದಿ ಮಾಡಿ ವೈರಲ್ ಆಗಿದ್ದ ಯೂಟ್ಯೂಬರ್ ಸಮೀರ್ ಬಂಧನಕ್ಕೆ ಧರ್ಮಸ್ಥಳ ಪೊಲೀಸರು ಮುಂದಾಗಿದ್ದಾರೆ.
ಪಿಎಸ್ ಐ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಯನ್ನು ಸುತ್ತುವರಿದಿದ್ದಾರೆ.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವಗಳ ಹೂತಿಟ್ಟ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿರುವ ನಡುವೆಯೇ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೋಡಿ ಅವರನ್ನು ಉಜಿರೆಯಲ್ಲಿ ಉಡುಪಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ಅವರನ್ನು ಬಂಧಿಸುವ ಪ್ರಯತ್ನ ನಡೆದಿದ್ದು, ಸುಳಿವು ದೊರೆತ ಸಮೀರ್ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ವಿವಿಧ ಪ್ರಕರಣಗಳ ಹೆಸರಿನಲ್ಲಿ ಧರ್ಮಸ್ಥಳದ ವಿರುದ್ಧ ವೀಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.







