ಸಮಗ್ರ ನ್ಯೂಸ್: ಜಾತಿ ಗಣತಿಯು ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಕಾರಣಕ್ಕೆ ಒಕ್ಕಲಿಗ ಸಮುದಾಯವು ಇಂದು (ಸೆ.20) ಮಹತ್ವದ ಸಭೆ ಕರೆಯುವ ಮೂಲಕ ತನ್ನ ನಿಲುವು ಸ್ಪಷ್ಟಪಡಿಸಲು ಮುಂದಾಗಿದೆ.
ಬೆಂಗಳೂರಿನ ವಿಜಯ ನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಈ ಸಭೆ ನಡೆಯಲಿದ್ದು, ಸಮುದಾಯದ ಪ್ರಮುಖ ನಾಯಕರು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ.
ನಿರ್ಮಲಾನಂದ ಶ್ರೀಗಳು ಕರೆದಿರುವ ಒಕ್ಕಲಿಗರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಸಮುದಾಯದ ಎಲ್ಲ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಆ ಮೂಲಕ, ಸಮುದಾಯದ ಹಿತಾಸಕ್ತಿಯ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಲು ನಾಯಕರು ತೀರ್ಮಾನಿಸಿದ್ದಾರೆ. ಇಂದು ನಡೆಯಲಿರುವ ಸಭೆಯ ನಂತರ, ಜಾತಿ ಸಮೀಕ್ಷೆಯ ಕುರಿತು ಸಮುದಾಯದ ಅಧಿಕೃತ ನಿಲುವನ್ನು ಪ್ರಕಟಿಸುವ ಸಾಧ್ಯತೆಯಿದೆ. ಈ ನಿರ್ಧಾರವು ರಾಜ್ಯ ಸರ್ಕಾರದ ಮುಂದಿನ ನಡೆಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದು ನಿರೀಕ್ಷಿಸಲಾಗಿದೆ.
ಒಕ್ಕಲಿಗ ಪ್ರಮುಖರ ಸಭೆಯಲ್ಲಿ ಜಾತಿ ಸಮೀಕ್ಷೆಯ ಪಟ್ಟಿಯಲ್ಲಿ ಒಕ್ಕಲಿಗ ಕ್ರಿಶ್ಚಿಯನ್ ಎಂಬ ಹೊಸ ಕಾಲಂ ಸೇರಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಲಿದೆ. ಒಕ್ಕಲಿಗ ಕ್ರಿಶ್ಚಿಯನ್ ಎಂದು ಸೇರಿಸಿ ಸಮುದಾಯವನ್ನು ವಿಭಜಿಸುವ ಹುನ್ನಾರ ಎಂದು ಈಗಾಗಲೇ ಹಲವು ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಸಮೀಕ್ಷೆಯ ಒಟ್ಟಾರೆ ಸ್ವರೂಪ ಮತ್ತು ಅದರಿಂದ ಸಮುದಾಯದ ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ, ಒಂದು ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಲಿಂಗಾಯತ ಸಮುದಾಯದ ಸಚಿವರು ಮತ್ತು ನಾಯಕರು ಕೂಡ ಸಮೀಕ್ಷೆಯಲ್ಲಿ ಹಲವಾರು ಹೆಚ್ಚುವರಿ ಜಾತಿ ಸೇರಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ, ಒಕ್ಕಲಿಗ ಸಮುದಾಯದ ಸಭೆಯು ಮಹತ್ವ ಪಡೆದುಕೊಂಡಿದೆ.







