ಸಮಗ್ರ ನ್ಯೂಸ್: ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿಯ ಹತ್ತರಗಿ ಬಳಿ ರೈತರು ಉಗ್ರ ಸ್ವರೂಪದ ಹೋರಾಟ ನಡೆಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ತರಗಿ ಬಳಿ ಹೆದ್ದಾರಿಯಲ್ಲಿ ಬೀಡು ಬಿಟ್ಟಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಆದರೆ ಹೆದ್ದರೈ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೂ ಬಗ್ಗದ ರೈತರು ದಿಢೀರ್ ಹೆದ್ದಾರಿ ಬಂದ್ ಮಾಡಿದ್ದಾರೆ. ಹತ್ತಾರು ಟ್ರ್ಯಾಕ್ಟರ್ ಗಳನ್ನು ರಸ್ತೆ ಮೇಲೆ ನಿಲ್ಲಿಸಿ ರಸ್ತೆ ಬಂದ್ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ಬಸ್ ಗಳು, ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲು ಸಾಲಾಗಿ ನಿಂತಿವೆ. ಪ್ರಯಾಣಿಕರು ಪರದಾಡುವಂತಾಯಿತು.
ಅತ್ತ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ







