ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. ಸರಕಾರಕ್ಕೂ ಅವರು ವರದಿ ಕೊಡುತ್ತಾರೆ. ವರದಿ ಬಂದ ಬಳಿಕ ಏನಿದೆ ಎಂದು ತಿಳಿಯಲಿದೆ ಎಂದರು.
ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣ ಕುರಿತು ಪ್ರತಿಕ್ರಿಯಿಸಿ, ಪೊಲೀಸರು ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ. ಖಂಡಿತಾ ದರೋಡೆಕೋರರನ್ನು ಹಿಡಿಯುತ್ತೇವೆ. ಘಟನೆ ವೇಳೆ ಯಾವೆಲ್ಲಾ ವಾಹನಗಳು ಓಡಾಡಿದ್ದವು? ರಾಜ್ಯದ ಹೊರಗೆ ಹೋಗಿರುವ ವಾಹನಗಳೆಷ್ಟು? ಎಲ್ಲದರ ಸಿಸಿಟಿವಿ ದೃಶ್ಯ ಪರಿಶೀಲಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.







