ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಪಿ.ಜಿ.ಸಂದೇಶ್ ಅವರಿಗೆ ಚಾಟಿ ಬೀಸಿದ ಹೈಕೋರ್ಟ್, ‘ಒಬ್ಬ ಪೊಲೀಸ್ ಅಧಿಕಾರಿಯಾಗಿ ಹೀಗೆಲ್ಲ ಮಾಡುವಂತಿಲ್ಲ’ ಎಂದು ಕಟುವಾಗಿ ಹೇಳಿದೆ.
ಅತ್ಯಾಚಾರ ಆರೋಪ ಸಂಬಂಧ ಶಿಕ್ಷಕಿಯೊಬ್ಬರು ದಾಖಲಿಸಿರುವ ದೂರು ಆಧರಿಸಿ ದಕ್ಷಿಣ ಕನ್ನಡದ ವೇಣೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪಿ.ಜಿ.ಸಂದೇಶ್, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್.ಮಲ್ಯ ಮತ್ತು ಮಂಗಳೂರಿನ ಸುನೀತಾ ಲೋಬೊ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ ಸಂದೇಶ ಪರ ವಕೀಲರು ಹಾಜರಾಗಿ, ಅರ್ಜಿಯನ್ನು ಹಿಂಪಡೆಯುವುದಾಗಿ ಹೇಳಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾದರೆ ಅದನ್ನು ಇದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅರ್ಜಿದಾರರು ಸ್ವತಂತ್ರರಿದ್ದಾರೆ ಎಂದು ಹೇಳಿ ಅರ್ಜಿ ವಾಪಸ್ ಪಡೆದುಕೊಳ್ಳಲು ಅನುಮತಿಸಿತು.
ಪ್ರಕರಣಕ್ಕೆ ತಡೆ ನೀಡಲು ಕಳೆದ ಬಾರಿಯ ವಿಚಾರಣೆ ವೇಳೆ ಹೈಕೋರ್ಟ್ ಹೇಳಿತ್ತು. ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗಲೂ ನ್ಯಾಯಾಲಯ ಅದೇ ನಿಲುವು ವ್ಯಕ್ತಪಡಿಸಿತು. ಹಾಗಾಗಿ, ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ಸಂದೇಶ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ತನಿಖೆ ನೆಪದಲ್ಲಿ ಅರ್ಜಿದಾರರಿಗೆ ಅನಗತ್ಯ ಕಿರುಕುಳ ನೀಡದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂಬ ಸಂದೇಶ್ ಪರ ವಕೀಲರ ಮನವಿಯನ್ನು ಇದೇ ವೇಳೆ ನ್ಯಾಯಪೀಠ ಸ್ಪಷ್ಟವಾಗಿ ತಳ್ಳಿಹಾಕಿತು.







