ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಉಪಚುನಾವಣೆ ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ.
ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್ ಮಾಡಲು ಸಜ್ಜಾಗಿದ್ದಾರೆ.
ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ 2 ಕ್ಷೇತ್ರಗಳ ಉಪಚುನಾವಣೆ ಸಮರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಸಂಜೆ 5.30ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. ಕಳೆದೊಂದು ವಾರದಿಂದ ಕ್ಷೇತ್ರದಲ್ಲೇ ಬೀಡುಬಿಟ್ಟು ಬಿರುಸಿನ ಪ್ರಚಾರ ನಡೆಸಿದ್ದ ನಾಯಕರು ಕ್ಷೇತ್ರಬಿಟ್ಟು ವಾಪಸ್ ತೆರಳಿದ್ದಾರೆ. ಇಂದು ಅಭ್ಯರ್ಥಿಗಳು ಮನೆಮನೆ ಪ್ರಚಾರ ನಡೆಸಲಿದ್ದು, ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಮತದಾನ ನಡೆಯಲಿದೆ.
ಬಾಗಲಕೋಟೆ ನಗರ ಕ್ಷೇತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾನೇರಾ ಫೈಟ್ ಕಾರಣವಾಗಿದೆ. ನಾಳೆ ವೋಟಿಂಗ್ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗಿದೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು. ಮತಗಟ್ಟೆಗಳೊಂದಿಗೆ ಸಿಬ್ಬಂದಿ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ತಮ್ಮ ತಮ್ಮ ಬೂತ್ಗಳತ್ತ ತೆರಳಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಅವರಲ್ಲಿ ಪುರುಷರು 1,26,999, ಮಹಿಳೆಯರು-1,32,775, ಇತರರು-23 ಮತ್ತು ಅಂಚೆ ಮತದಾರರು-170. ಒಟ್ಟು 09 ಅಭ್ಯರ್ಥಿಗಳು ಕಣದಲ್ಲಿದಿದ್ದಾರೆ. ಒಟ್ಟು 332 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. 1,564 ಚುನಾವಣಾ ಸಿಬ್ಬಂದಿ ನಿಯೋಜಿಸಲಾಗಿದ್ದು, ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಮತಗಟ್ಟೆಗಳ ಬಳಿ ವ್ಹೀಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿದೆ. ಯುವ ಮತದಾನ ಕೇಂದ್ರ ಮತ್ತು ಮಹಿಳೆಯರಿಗಾಗಿ ಎರಡು ಸಖಿ ಮತಗಟ್ಟೆಗಳನ್ನು ತೆರೆಯಲಾಗಿದ್ದು ಗಮನ ಸೆಳೆಯುತ್ತಿವೆ.
ದಾವಣಗೆರೆ ದಕ್ಷಿಣದಲ್ಲಿ ಒಟ್ಟು 284 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ
76 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,489 ಚುನಾವಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಎಲ್ಲ ಮತಗಟ್ಟೆಯಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಇದೆ. ಇನ್ನು ಒಟ್ಟು 2,31072 ಮತದಾರರಿದ್ದು, ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಕಣದಲ್ಲಿ 25 ಅಭ್ಯರ್ಥಿಗಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.







