ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡಕವಿದ ವಾತಾವರಣ ಕಂಡುಬಂದರೂ, ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.
ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 40°C ದಾಟುವ ಸಾಧ್ಯತೆಯಿದ್ದು, ಜನರಿಗೆ ಬಿಸಿಲಿನಿಂದ ಜಾಗರೂಕರಾಗಿರಲು ಸೂಚಿಸಲಾಗಿದೆ.ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದ ಜೊತೆಗೆ ತೇವಾಂಶ ಭರಿತ ಹವಾಮಾನ ಇರಲಿದ್ದು, ಉಷ್ಣಾಂಶದ ಅನುಭವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳ ಕೆಲವೆಡೆ ಗುರುವಾರ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದ.ಕ ಜಿಲ್ಲೆಯ ಕೆಲವು ಕಡೆಗಳಲ್ಲಿ 16 ರಿಂದ ಎರಡು ದಿನಗಳ ಕಾಲ ಬಿಸಿ, ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ದಲ್ಲಿ ಏರಿಕೆ ಕಾಣುತ್ತಿದೆ. ದ. ಕ. ಜಿಲ್ಲೆಯಾದ್ಯಂತ ಬುಧವಾರ ಬೆಳಗ್ಗೆ ತುಸು ಮೋಡ ಇತ್ತು. ಬಳಿಕ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 34.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.5 ಡಿ. ಸೆ. ಏರಿ ಮತ್ತು 27 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.2 ಡಿ. ಸೆ. ಉಷ್ಣಾಂಶ ಏರಿಕೆ ಕಂಡಿತ್ತು.







