ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ.
ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು ಅಪಘಾತ ಪ್ರಕರಣದ ಪರಿಶೀಲನೆಗಾಗಿ ಪೊಲೀಸ್ ಸಿಬ್ಬಂದಿ ಮಣ್ಣಗುಡ್ಡದ ಗೋದಾಮು ಸಮೀಪ ತೆರಳಿದ್ದರು. ಈ ವೇಳೆ ಬಲ್ಲಾಲ್ಬಾಗ್ ಕಡೆಯಿಂದ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ KA-19-MP-9623 ಸಂಖ್ಯೆಯ ಕಾರು ರಸ್ತೆಬದಿಯಲ್ಲಿ ನಿಂತಿದ್ದ ಹೆಡ್ ಕಾನ್ಸ್ಟೆಬಲ್ ವಿಠಲ್ ದಾಸ್ ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಕ್ಷಣದಲ್ಲಿ ಸ್ಥಳದಲ್ಲಿದ್ದ ಕೆಲವರು ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಗಳೂರು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 33/2026ರಡಿ ಬಿಎನ್ಎಸ್ ಸೆಕ್ಷನ್ 281 ಹಾಗೂ 125(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.






