ಸಮಗ್ರ ನ್ಯೂಸ್: ನಿರಂತರ ಸುರಿಯುತ್ತಿರುವ ಮಳೆಯಿಂದ ಆಗುಂಬೆ ಘಾಟಿ ಪ್ರದೇಶದಲ್ಲಿ ಭೂಕುಸಿತದ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಈ ಪ್ರಮುಖ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ (ತೀರ್ಥಹಳ್ಳಿ-ಮಲ್ಪೆ ರಸ್ತೆ) ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಮಣ್ಣು ಹೆಚ್ಚು ತೇವಗೊಂಡಿರುವ ಕಾರಣ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ.
ಆದೇಶದಂತೆ ಸೆಪ್ಟೆಂಬರ್ 30ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಆದರೆ ಲಘು ವಾಹನಗಳು ನಿಗದಿತ ನಿಯಮಗಳನ್ನು ಪಾಲಿಸಿ ಸಂಚರಿಸಬಹುದಾಗಿದೆ.
ಘಾಟಿಯ ಚೆಕ್ಪೋಸ್ಟ್ಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷತಾ ಮಾನದಂಡಗಳನ್ನು ಪೂರೈಸುವ ಲಘು ವಾಹನಗಳಿಗೆ ಮಾತ್ರ ಮುಂದಕ್ಕೆ ತೆರಳಲು ಅನುಮತಿ ನೀಡಲಾಗುತ್ತಿದೆ.
ಮುಂಗಾರು ಅವಧಿಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಜಾರಿಗೊಳಿಸಲಾಗಿದೆ. ಅಗತ್ಯವಿಲ್ಲದಿದ್ದರೆ ಆಗುಂಬೆ ಘಾಟಿ ಮಾರ್ಗದಲ್ಲಿ ಪ್ರಯಾಣವನ್ನು ತಪ್ಪಿಸುವಂತೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.








