ಸಮಗ್ರ ನ್ಯೂಸ್: ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾರಿಗೆ ಸಚಿವರು ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಸಾರ್ವಜನಿಕ ಬಸ್ಸುಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಹಾಗೂ ಧೂಮಪಾನ ಮಾಡುವುದರಿಂದ ಇತರೆ ಪ್ರಯಾಣಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ, ಇದರ ವಿರುದ್ಧ ಸೂಕ್ತ ಕ್ರಮ ಹಾಗೂ ನಿರ್ದೇಶನಗಳನ್ನು ನೀಡುವಂತೆ ಕೋರಿ ಜುಲೈ 8ರಂದು ಸಾರಿಗೆ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಈ ಮನವಿಗೆ ತಕ್ಷಣ ಸ್ಪಂದಿಸಿರುವ ಸಾರಿಗೆ ಸಚಿವರ ಆಪ್ತ ಕಾರ್ಯದರ್ಶಿಯವರಾದ ಡಾ|| ದೇವರಾಜ ಬಿ. (ಕೆ.ಎ.ಎಸ್) ಅವರು, ಸರ್ಕಾರದ ಕಾರ್ಯದರ್ಶಿಗಳು (ಸಾರಿಗೆ ಇಲಾಖೆ) ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ. ಉಲ್ಲೇಖಿತ ಪತ್ರದಲ್ಲಿನ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಸಾರ್ವಜನಿಕ ಬಸ್ಗಳಲ್ಲಿ ಧೂಮಪಾನ ಹಾಗೂ ತಂಬಾಕು ಮುಕ್ತ ವಾತಾವರಣ ನಿರ್ಮಿಸಲು ತಕ್ಷಣದಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರಿಂದ ನಿರ್ದೇಶನ ನೀಡಲಾಗಿದೆ.
ಈ ಆದೇಶದ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯದ ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸೇರಿದಂತೆ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಧೂಮಪಾನ ಮಾಡುವುದು ಕಂಡುಬಂದಲ್ಲಿ ನಿಯಮಾನುಸಾರ ಕಠಿಣ ದಂಡ ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೂಲಗಳು ತಿಳಿಸಿವೆ.








