ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪುಷ್ಯ ಮಳೆ ಚುರುಕಾಗಿದ್ದು, ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆ ಜೊತೆಗೆ ಜೋರಾದ ಗಾಳಿ ಮುನ್ಸೂಚನೆ ನೀಡಲಾಗಿದೆ.
ಇನ್ನು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.
ಕರಾವಳಿ ಕರ್ನಾಟಕದ ಭಾಗದಲ್ಲಿ ಮುಂಬರುವ ದಿನಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಬಿರುಗಾಳಿ ಮತ್ತು ಸುಸ್ಥಿರ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಸುಸ್ಥಿರ ಗಾಳಿ ಬೀಸುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆ ಮತ್ತು ಬಿರುಗಾಳಿಯ ಪ್ರಮಾಣ ಗಣನೀಯವಾಗಿ ಏರಿಕೆಯಾಗುವ ಲಕ್ಷಣಗಳಿವೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು.
ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ.








